ಡೀಸೆಲ್ ಮಾರಾಟ ದರ, ಹಾಲು, ವಿದ್ಯುತ್ ಸೇರಿದಂತೆ ರಾಜ್ಯ ಸರ್ಕಾರ ಮಾಡಿರುವ ಎಲ್ಲ ದರ ಹೆಚ್ಚಳ ಆದೇಶಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿ ಬೆಂಗಳೂರಿನಲ್ಲಿ ಅಹೋ ರಾತ್ರಿ ಧರಣಿ ಆರಂಭಿಸಿದೆ.
ಪಕ್ಷದ ಎಲ್ಲಾ ಶಾಸಕರು ಮತ್ತು ಪ್ರಮುಖ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಪಾಲ್ಗೊಂಡಿದ್ದು ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜನಹಿತ ಮುಖ್ಯವಲ್ಲ. ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ಡಿಸೇಲ್ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಇವರಿಗೆ ಜನರ ಹಿತಕ್ಕಿಂತ ತಮ್ಮ ಖುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ ಎಂದು ಗುಡುಗಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಆಲಿಬಾಬಾ ಮತ್ತು ಕಳ್ಳರ ಕಥೆ ಕೇಳಿದ್ದೋ, ಈಗ ಆಲಿಬಾಬ ಮತ್ತು 135 ಜನ ಕಳ್ಳರಿದ್ದಾರೆ. ನಾವು ಅಣೆಕಟ್ಟು ಕಟ್ಟುತ್ತೀವಿ, ಡ್ಯಾಮ್ ಕಟ್ಟುತ್ತೀವೆ ಅಂತಾರೆ, ಮತ್ತೊಂದು ಕಡೆ ಎಷ್ಟು ಟ್ಯಾಕ್ಸ್ ಹಾಕುತ್ತೇವೆ ಎಂಬುದನ್ನು ಹೇಳುವುದಿಲ್ಲ. ಬಜೆಟ್ನಲ್ಲಿ ಟ್ಯಾಕ್ಸ್ ಬಗ್ಗೆ ಹೇಳಿಲ್ಲ, ಆದರೆ ಪ್ರತಿ ದಿನ ಬೆಲೆ ಏರಿಕೆ ಮಾಡಿ ಬರೆ ಎಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗೆ ಬಗ್ಗೆ ಪ್ರತಿ ಮನೆ ಮನೆಗೂ ತೆರಳಿ ಮನವರಿಕೆ ಮಾಡಿಕೊಡುತ್ತೇವೆ. ಜನರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಈ ಆಂದೋಲನದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಮತ್ತೊಂದೆಡೆ ವಿಧಾನಸಭೆ ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಕಲಾಪದಿಂದ ಅಮಾನತುಗೊಳಿಸಿರುವ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಶಾಸಕರು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಧರಣಿ ನಡೆಸಿದರು.


