ಒಳ ಮೀಸಲಾತಿಗಾಗಿ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಪರಿಶಿಷ್ಟ ಜಾತಿಗಳಿಗೆ ಸಿಹಿ ಸುದ್ದಿಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಸರ್ಕಾರ ಎರಡು ತಿಂಗಳಲ್ಲಿ ಒಳ ಮೀಸಲಾತಿ ಜಾರಿ ಆದೇಶ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.
ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾರು ಬೇಡವೆಂದರೂ ಒಳ ಮೀಸಲಾತಿ ಜಾರಿ ಮಾಡುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಸುಪ್ರೀಂಕೋರ್ಟ್ ಆದೇಶವನ್ನು ಖಚಿತವಾಗಿ ಪಾಲಿಸುತ್ತೇವೆ. ಆಯೋಗದ ಅಧ್ಯಕ್ಷ ನಾಗಮೋಹನ್ ದಾಸ್ ಅವರು ಎರಡು ತಿಂಗಳ ಅವಧಿ ಕೇಳಿದ್ದಾರೆ. ಬಳಿಕ ಪರಿಶಿಷ್ಟ ಗುಂಪಿನ ಯಾವ ಜಾತಿಗೂ ಅನ್ಯಾಯ ಆಗದಂತೆ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೂ ಮೀಸಲಾತಿ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ದುರ್ಬಲ ವರ್ಗಗಳ ಹೆಸರಲ್ಲಿ ಶೇ 10 ಮೀಸಲಾತಿ ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳಾಗಿದ್ದಾರೆ. ಹಾಗಾಗಿ, ಮೀಸಲಾತಿ ವಿರೋಧಿಸುವವರು ಈಗ ಯಾರೂ ಇಲ್ಲ ಎಂದು ಪ್ರತಿಪಾದಿಸಿದರು.
ಬಾಬು ಜಗಜೀವನ್ ರಾಮ್ ಅವರು ಸಾಮಾಜಿಕ ನ್ಯಾಯದ ಹರಿಕಾರ. ಜಾತಿ ವ್ಯವಸ್ಥೆ ಕಾರಣಕ್ಕೆ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂಬ ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ಸ್ಮರಿಸಿದರು.
ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ, ಜಾತಿಯ ಅಸಮಾನತೆಗೆ ಬಲಿ ಆಗಿದ್ದೇವೆ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ಜೀವಂತವಾಗಿರುವರೆಗೂ ಸಮಾನ ಅವಕಾಶಗಳು ಸಿಗಲು ಸಾಧ್ಯವಿಲ್ಲ. ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರವಾಗಿ ಸಂವಿಧಾನ ಬಂತು. ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಅವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸುವ ಮೂಲಕ ಅವರ ಹಾದಿಯಲ್ಲಿ ನಡೆಯಬೇಕು’ ಎಂದರು.