“ನಮ್ಮ ಕನಸು, ನಮ್ಮ ತುಮಕೂರು” ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನಡೆಯುತ್ತಿರುವ ಒಂದು ಪ್ರಾಮಾಣಿಕ ಪ್ರಯತ್ನ. ಇದರಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಪಾಲ್ಗೊಳ್ಳುವಂತಾಗಬೇಕು ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.
ತುಮಕೂರು ನಗರದ ತುಮಕೂರು ವಿವಿ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ತುಮಕೂರು ವಿವಿಯ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಹಾಗೂ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ಕೈಗೊಂಡಿದ್ದ ನಮ ಕನಸು, ನಮ್ಮ ತುಮಕೂರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ನುಡಿಗಳ್ನಾಡಿದ ಅವರು, ಬೆಂಗಳೂರಿಗೆ ಅತಿ ಕಡಿಮೆ ದೂರದಲ್ಲಿರುವ ತುಮಕೂರು ಜಿಲ್ಲೆಯಲ್ಲಿ ಒಳ್ಳೆಯ ರಸ್ತೆಗಳಿಲ್ಲ. ಸಾವಿರಾರು ಎಕರೆಯಲ್ಲಿ ಕೈಗಾರಿಕೆಗಳಿದ್ದರೂ ಸ್ಥಳೀಯರಿಗೆ ಉದ್ಯೋಗವಿಲ್ಲ. ರಾಜಕೀಯವಾಗಿ, ಅರ್ಥಿಕವಾಗಿ, ಔದ್ಯೋಗಿಕವಾಗಿಯೂ ಹಿಂದೆ ಉಳಿದಿದೆ. ಹಾಗಾಗಿ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ದಿ ದೃಷ್ಟಿಯಿಂದ ಎಲ್ಲಾ ತಾಲೂಕು, ಹೋಬಳಿ ಹಂತದಲ್ಲಿಯೂ ಅಲ್ಲಿನ ಯುವಜನತೆ, ಮುಖಂಡರುಗಳು, ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಜಿಲ್ಲಾ ಮಟ್ಟದಲ್ಲಿ ಇಂದು ವಿವಿಧ ವಲಯಗಳ ಜನರು, ತುಮಕೂರು ಜಿಲ್ಲೆಯ ಅಭಿವೃದ್ದಿ ತಮ್ಮ ದೂರದೃಷ್ಟಿ ಚಿಂತನೆಗಳೇನು ಎಂಬುದನ್ನು ಹಂಚಿಕೊಳ್ಳುವ ಸಲುವಾಗಿ ದುಂಡು ಮೇಜಿನ ಸಭೆ ಕರೆಯಲಾಗಿದೆ. ರೈತರು, ಕಾರ್ಮಿಕರು, ಕ್ರೀಡಾಪಟುಗಳು, ಮಾಜಿ ಸೈನಿಕರು, ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಜನರು ಸಹ ಪಾಲ್ಗೊಂಡಿದ್ದಾರೆ. ಅವರೆಲ್ಲರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಡಳಿತಕ್ಕೆ ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಯಾವ ಯೋಜನೆಗಳ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿವಿ ರಿಜಿಸ್ಟಾರ್ ನಾಹಿದ್ಜಮ್ಜಮ್ ವಹಿಸಿದ್ದರು. ಸಮಾಜಕಾರ್ಯ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಪ್ರೊ. ಪರುಶುರಾಮ್, ಮುದ್ದೇನಹಳ್ಳಿ ಸತ್ಯ ಸಾಯಿ ಸೇವಾ ಟ್ರಸ್ಟ್ನ ಕಲ್ಪನಾ, ಅರಿವಿನ ಮನೆಯ ಶಶಿಧರ್, ಕಸಾಪ ಅಧ್ಯಕ್ಷಕೆ.ಎಸ್.ಸಿದ್ದಲಿಂಗಪ್ಪ ಇದ್ದರು.


