ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದು ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್-ಡಿಸೆಂಬರ್ನಲ್ಲಿ ನಡೆಯುತ್ತೆ ಎಂದು ಹೇಳಲಾಗುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೂ ಹೊಂದಾಣಿಕೆ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ನವೆಂಬರ್ ನಂತರ ಏನು ಬೆಳವಣಿಗೆ ಆಗತ್ತದೆ ಎಂಬುದನ್ನು ನೋಡೋಣ ಎಂದು ಚುಟುಕಾಗಿ ಉತ್ತರಿಸಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಹೇಮಾವತಿ ಜಲಾಶಯದಿಂದ ಮಂಡ್ಯ, ರಾಮನಗರ, ಹಾಸನ, ತುಮಕೂರು ಈ ಎಲ್ಲ ಜಿಲ್ಲೆಗಳ ರೈತರು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದುವರೆಗೂ ರೈತರ ಸಭೆ ಕರೆದು ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕುಮಾರಣ್ಣನವರ ಕಾಲಘಟ್ಟದಲ್ಲಿ ಈ ರೀತಿ ಘಟನೆ ನಡೆದಿದ್ದರೆ ಅವರು ರೈತರನ್ನು ಕೂರಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೆ.ಪಿ. ಭವನದಲ್ಲಿ ಅಧಿಕೃತವಾಗಿ ರಾಜ್ಯ ಪ್ರವಾಸಕ್ಕೆ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಮುಂದಿನ 60 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಗುವುದು ಎಂದರು.
ಜೆಡಿಎಲ್ಪಿ ನಾಯಕ ಸಿ.ಬಿ. ಸುರೇಶ್ಬಾಬು, ಮಾಜಿ ಶಾಸಕ ಹೆಚ್. ನಿಂಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಟಿ.ಆರ್. ಆಂಜಿನಪ್ಪ, ಟಿ.ಆರ್. ನಾಗರಾಜು, ಶಾಂತಕುಮಾರ್ ಮೊದಲಾದವರು ಇದ್ದರು.


