ತುಮಕೂರು ಜಿಲ್ಲೆಯ 35 ವರ್ಷದ ಹೆಬ್ಬಾಕ ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಸ್ವಾಮಿ ಮಂಗಳವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮಂಗಳವಾರ ಬೆಳಿಗ್ಗೆ ತಮ್ಮ ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ಮರಳಿದ ತಕ್ಷಣ ನೀಲಕಂಠಸ್ವಾಮಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತುಮಕೂರಿನ ಆಸ್ಪತ್ರೆಗೆ ಕರೆ ತರುವ ವೇಳೆಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನೀಲಕಂಠಸ್ವಾಮಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಅವರ ಅಣ್ಣನ ಮಗನಾಗಿದ್ದು, ಮೃತರು ಪತ್ನಿ, ಮಗಳನ್ನು ಅಗಲಿದ್ದಾರೆ, ನೀಲಕಂಠಸ್ವಾಮಿ ಈ ಹಿಂದೆ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು, ಈಗ ಹಾಲಿ ಗ್ರಾ.ಪಂ.ಸದಸ್ಯರಾಗಿದ್ದರು.
ಮೃತರ ಅಂತ್ಯಕ್ರಿಯೆಯು ಜುಲೈ 2ರಂದು 11ಗಂಟೆಗೆ ಹೆಬ್ಬಾಕ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಶಾಸಕರ ಸಂತಾಪ:
ನೀಲಕಂಠಸ್ವಾಮಿ ನಿಧನಕ್ಕೆ ತುಮಕೂರು ಶಾಸಕ ಜಿ.ಬಿ.ಜ್ಯೋತಿಗಣೇಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬ ಮತ್ತು ಸಂಬಂಧಿಕರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.


