ರಾಜ್ಯ ಸರ್ಕಾರ ಈ ತಿಂಗಳ ಅಂತ್ಯದೊಳಗೆ ಪರಿಶಿಷ್ಟ ಜಾತಿಗಳ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಆಗಸ್ಟ್ 1ರಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ಆಗಸ್ಟ್ 15ರ ನಂತರ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಚಿತ್ರದುರ್ಗ ಸಂಸದಗೋವಿಂದ ಕಾರಜೋಳ ಸರ್ಕಾರಕ್ಕೆಎಚ್ಚರಿಕೆ ನೀಡಿದರು.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿ ಮಾಡಲು ಸಿದ್ದರಾಮಯ್ಯ ಸರ್ಕಾರಕ್ಕೆ ಆಸಕ್ತಿಯೂ ಇಲ್ಲ, ಇಚ್ಛಾಶಕ್ತಿಯೂ ಇಲ್ಲ, ಮಾದಿಗ ಸಮುದಾಯದವರ ಕಣ್ಣು ಒರೆಸುತ್ತಾ ನೆಪ ಹೇಳಿಕೊಂಡು ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು.
ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ ಮುಂತಾದ ರಾಜ್ಯಗಳಲ್ಲಿ ಜನಸಂಖ್ಯೆ ಆಧಾರದಲ್ಲಿ ಅಲ್ಲಿನ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದಿವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಮುಗಿದರೂ ಕುಂಟು ನೆಪ ಹೇಳಿಕೊಂಡು ಬಂದಿದೆ. ಸರ್ಕಾರಕ್ಕೆ ರಾಜ್ಯದ ಮಾದಿಗ ಸಮುದಾಯದವರು ಕಡೆಯ ಎಚ್ಚರಿಕೆ ನೀಡುತ್ತಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಒಳಮೀಸಲಾತಿ ಜಾರಿಗೆ ಕ್ರಮ ತೆಗೆದುಕೊಳ್ಳದಿದ್ದರೆ ಸರ್ಕಾರ ನಡೆಸಲು ಬಿಡುವುದಿಲ್ಲ ಎಂದರು.
ಕೇಂದ್ರ ಮಾಜಿ ಸಚಿವ ನಾರಾಯಣಸ್ವಾಮಿ ಮಾತನಾಡಿ, ಒಳಮೀಸಲಾತಿ ಈ ದೇಶದಲ್ಲಿ ಹೊಸದೇನೂ ಅಲ್ಲ, 1975ರಲ್ಲಿ ಪಂಜಾಬ್ ಸರ್ಕಾರ ಒಳಮೀಸಲಾತಿ ಜಾರಿ ಮಾಡಿತ್ತು. ರಾಜ್ಯದಲ್ಲಿ ಒಳಮೀಸಲಾತಿಗಾಗಿ ಸುಮಾರು 30 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಈಗ ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಆಗಬೇಕಾಗಿದೆ ಎಂದರು.
ಆಯಾ ರಾಜ್ಯಗಳ ಜಾತಿಗಳ ಸ್ಥಿತಿಗತಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂಕೋಟ್ ಹೇಳಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲತಿ ಅನುಷ್ಠಾನಗೊಳಿಸದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮಾದಿಗ ಸಮುದಾಯದ ಜನರ ಹಕ್ಕಿಗಾಗಿ ನಡೆಸುತ್ತಿರುವ ಈ ಹೋರಾಟ ಪಕ್ಷಾತೀತವಾಗಿದ್ದು, ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಎಲ್ಲಾ ಪಕ್ಷದ ಮುಖಂಡರು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಪಾವಗಡ ಶ್ರೀರಾಮ್, ಡಾ. ಲಕ್ಷ್ಮೀಕಾಂತ್, ಅನಿಲ್ಕುಮಾರ್, ರಂಜನ್, ನರಸಿಂಹಮೂರ್ತಿ, ಎ.ಹೆಚ್.ಆಂಜಿನಪ್ಪ, ದೀಪಕ್ ದೊಡ್ಡಯ್ಯ ಇದ್ದರು.


