ಸಾರಿಗೆ ಸಂಸ್ಥೆ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಿಗರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುಮಕೂರು ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.
ಗುಬ್ಬಿ ತಾಲ್ಲೂಕಿನ ಮೂಕನಾಯಕನಹಳ್ಳಿ ಗ್ರಾಮದ ನಿವಾಸಿ ಹಾಗೂ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹೋಬಳಿಯ ಪರ್ತಿಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಎಂ.ಹೆಚ್. ಮಹೇಶ್(31) ಮೃತ ವ್ಯಕ್ತಿ.
ಗ್ರಾಮ ಲೆಕ್ಕಿಗ ಮಹೇಶ್ ಮಂಗಳವಾರ ಬೆಳಗ್ಗೆ ತುಮಕೂರಿನಿಂದ ತಮ್ಮ ಸ್ವಗ್ರಾಮ ಮೂಕನಾಯಕನಹಳ್ಳ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ಗೊಲ್ಲಹಳ್ಳಿ ಸಮೀಪ ಸಾರಿಗೆ ಬಸ್ ಅಪ್ಪಳಿಸಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಗ್ರಾಮ ಲೆಕ್ಕಿಗ ಮಹೇಶ್ ಅವರ ಪತ್ನಿ 13 ದಿನಗಳ ಹಿಂದೆಯಷ್ಟೇ 2ನೇ ಮಗುವಿಗೆ ಜನ್ಮ ನೀಡಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.
ಗ್ರಾಮ ಲೆಕ್ಕಿಗ ಮಹೇಶ್ ಅವರು ಪತ್ನಿ ಸಂಧ್ಯಾ, ಇಬ್ಬರು ಪುತ್ರಿಯರು ತಂದೆ-ತಾಯಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಗ್ರಾಮ ಆಡಳಿತಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ದೇವರಾಜು ಹಾಗೂಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


