ಚುನಾವಣಾ ಆಯೋಗದ ವಿರುದ್ಧ ಆ.5 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಅಕ್ರಮಗಳು ನಡೆದಿವೆ. ಹೀಗಾಗಿ ಚುನಾವಣಾ ಆಯೋಗದ ವಿರುದ್ಧ ರಾಹುಲ್ಗಾಂಧಿ ಪ್ರತಿಭಟನೆ ನಡೆಸಲು ಆ.5 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಚುನಾವಣಾ ಆಯೋಗದ ವಿರುದ್ದ ಅನೇಕ ದೂರುಗಳು ಬಂದಿದ್ದವು ಎಂದು ಹೇಳಿದರು.
ದೇಶದಲ್ಲಿ ಚುನಾವಣಾ ಅಕ್ರಮಗಳ ದೂರುಗಳನ್ನು ಸರಿಯಾಗಿ ಗಮನಿಸುತ್ತಿಲ್ಲ. ಮತಪಟ್ಟಿಗೆ ಮತದಾರರ ಹೆಸರು ಸೇರ್ಪಡೆ ಮಾಡುವ ಹಾಗೂ ಮತ ಪಟ್ಟಿಯಿಂದ ಹೆಸರುಗಳನ್ನು ತೆಗೆಯುವ ವಿಚಾರದಲ್ಲೂ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮಗಳು ಆಗಿವೆ. ಹೀಗಾಗಿ ರಾಹುಲ್ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕೂಡ ಈ ರೀತಿಯ ಅಕ್ರಮಗಳು ನಡೆದಿವೆ ಎಂದು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಚುನಾವಣೆಯನ್ನು ಯಾವುದೇ ಅಕ್ರಮ ಇಲ್ಲದೆ ನಡೆಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಮಹದೇವಪುರ ಕ್ಷೇತ್ರದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮತದಾರರನ್ನು ಅಕ್ರಮವಾಗಿ ಮತ ಪಟ್ಟಿಗೆ ಸೇರಿಸಲಾಗಿದೆ. ಅದೇ ರೀತಿ ಮತ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಈ ರೀತಿಯ ಅಕ್ರಮಗಳು ನಡೆಯುತ್ತಿದೆ ಎಂಬುದು ನಮ್ಮ ಆರೋಪ ಎಂದರು.
ಒಳಮೀಸಲಾತಿ ಜಾರಿ
ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದತೆ ಇನ್ನೊಂದು ವಾರದಲ್ಲಿ ನ್ಯಾ. ನಾಗಮೋಹನ್ದಾಸ್ ನೇತೃತ್ವದ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಇದೆ. ಹೀಗಾಗಿ ಒಳಮೀಸಲಾತಿ ಜಾರಿ ಕುರಿತು ದಲಿತ ಶಾಸಕರೊಂದಿಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಒಳಮೀಸಲಾತಿ ಜಾರಿ ಮಾಡಬೇಕು ಎಂಬ ಉದ್ದೇಶಕ್ಕಾಗಿಯೇ ನ್ಯಾ. ನಾಗಮೋಹನ್ದಾಸ್ ಆಯೋಗವನ್ನು ರಚನೆ ಮಾಡಿರುವುದು. ಇದರಲ್ಲಿ ಯಾವುದೇ ಅನುಮಾನ ಬೇಡ. ಒಳಮೀಸಲಾತಿ ಜಾರಿ ಮಾಡಿಯೇ ಮಾಡುತ್ತೇವೆ ಎಂದರು.
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣದ ಸಂಬAಧ ಎಸ್ಐಟಿ ತನಿಖೆ ನಡೆಯುತ್ತಿದೆ. ಹಾಗಾಗಿ ಈ ವಿಚಾರದ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ತನಿಖಾ ವರದಿ ಬರುವವರೆಗೂ ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.


