ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ಬಾಬು ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ನಗರದಿಂದ ರಸ್ತೆ ಗುಂಡಿ ಮುಚ್ಚುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಳವಳಿ ಮಾಡಲು ಈಗಾಗಲೇ ನಿರ್ಧರಿಸಿದ್ದೇವೆ. ನಂತರ ಎಲ್ಲ ತಾಲ್ಲೂಕು ಮಟ್ಟದಲ್ಲೂ ಸಹ ಹೋರಾಟ ಮಾಡಲಾಗುವುದು ಎಂದರು.
ರಾಜ್ಯದ ಬೆಂಗಳೂರು ಸೇರಿದಂತೆ ಎಲ್ಲಾ ಭಾಗದಲ್ಲೂ ರಸ್ತೆಗಳು ಹದಗೆಟ್ಟು ಹೋಗಿವೆ. ಪ್ರತಿನಿತ್ಯ ಜನಸಾಮಾನ್ಯರು ತರಾತುರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುತ್ತಿರುತ್ತಾರೆ. ಆ ವೇಳೆ ಏನಾದರೂ ಸಮಸ್ಯೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಬೆಂಗಳೂರನ್ನು ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಅಲ್ಟಿಮೆಟ್ ಸಿಟಿ ಎಂದು ಕರೆಯುತ್ತಾರೆ. ಎಲ್ಲ ದೇಶದವರು ಬೆಂಗಳೂರನ್ನು ಉತ್ತಮವಾಗಿ ಬೆಳೆಯುತ್ತಿರುವ ನಗರ ಎಂದು ಹೇಳುತ್ತಾರೆ. ಆದರೆ ಈ ನಗರಕ್ಕೆ ಮೂಲ ಸೌಕರ್ಯ ಒದಗಿಸಿ ರಸ್ತೆ ಗುಂಡಿಗಳನ್ನು ಮುಚ್ಚಲು ನಮ್ಮ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ, ಈ ಸರ್ಕಾರಕ್ಕೆ ನಾಚಿಕೆಯಾಗಬೇಕು. ನೀರು, ರಸ್ತೆ, ಚರಂಡಿ, ಬೀದಿದೀಪ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಈ ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ ಏನರ್ಥ ಎಂದು ಕಿಡಿಕಾರಿದರು.
ಜನ ಅಧಿಕಾರ ಕೊಟ್ಟ ಮೇಲೆ ಬೇರೆಯವರ ಮೇಲೆ ಗೂಬೆ ಕೂರಿಸುವ, ಆಕ್ಷೇಪಣೆ ಮಾಡಿ ತಪ್ಪಿಸಿಕೊಳ್ಳುವ ಕೆಲಸ ಸೂಕ್ತವಲ್ಲ. ಜನತೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವುದು ಸಮಂಜಸ ಎಂದರು.
ಜಿಲ್ಲೆಯ ಶೆಟ್ಟಿಕೆರೆ-ತಿಪಟೂರು ರಸ್ತೆ ಅಭಿವೃದ್ಧಿಗೆ ಈಗಾಗಲೇ 10 ಕೋಟಿ ರೂ. ಹಣ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಈ ರಸ್ತೆ ಅಭಿವೃದ್ಧಿಗೆ ಇನ್ನು ಅಗತ್ಯ ಇರುವ ಹಣವನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಎಲ್ಲ ಸಮಾಜಕ್ಕೂ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡಬೇಕು ಎಂಬುದು ನಮ್ಮೆಲ್ಲರ ಒತ್ತಾಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.


