Thursday, December 11, 2025
Google search engine
Homeಮುಖಪುಟಒಬಿಸಿಗೂ ರಾಜಕೀಯ ಅಧಿಕಾರ ಬೇಕು-ಕೆ.ಎನ್.ಆರ್

ಒಬಿಸಿಗೂ ರಾಜಕೀಯ ಅಧಿಕಾರ ಬೇಕು-ಕೆ.ಎನ್.ಆರ್

ಪರಿಶಿಷ್ಟ ಜಾತಿ, ಪಂಗಡದವರಿಗೆ ಇರುವಂತೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ದೊರೆಯಬೇಕು. ಆ ಮೂಲಕ ಈ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಮಾಜಿ ಸಚಿವ, ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

ತುಮಕೂರಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ರಾಜಕೀಯ ಅಧಿಕಾರ ಇಲ್ಲದಿದ್ದರೆ ಸಮಸ್ಯೆಗಳನ್ನು ಪ್ರಸ್ತಾಪ ಮಾಡಲು ಅವಕಾಶ ಸಿಗುವುದಿಲ್ಲ. ರಾಜಕೀಯ ಅಧಿಕಾರ ಇಲ್ಲದ ಸಮುದಾಯಗಳು ರಾಜಕೀಯ ಅಧಿಕಾರ ಹೊಂದಿರುವ ಸಮುದಾಯಗಳ ಮೇಲೆ ಅವಲಂಬಿತವಾಗುವಂತಹ ಪರಿಸ್ಥಿತಿ ಬರುತ್ತದೆ ಎಂದರು.

ರಾಜಕಾರಣದಲ್ಲಿ ಅಸಾಧ್ಯವಾದುದನ್ನು ಸಾಧ್ಯ ಮಾಡಬೇಕು. ರಾಜಕೀಯ ಅಧಿಕಾರ ಪಡೆಯಲು ಸಮುದಾಯಗಳು ಸಂಘಟಿತರಾಗಬೇಕು. ಅಧಿಕಾರ ಪಡೆದ ನಂತರ ಧ್ವನಿ ಇಲ್ಲದವರು, ಅಸಹಾಯಕರು, ಎಲ್ಲಾ ಜಾತಿಯ ಬಡವರಿಗೆ ಸಹಾಯ ಮಾಡಿ ಅವರಿಗೆ ನ್ಯಾಯ ದೊರಕಿಸಬೇಕು. ಇಂದು ಎಷ್ಟೋ ಸಣ್ಣ ಸಮುದಾಯಗಳಿಗೆ ರಾಜಕೀಯ ಅಧಿಕಾರವೇ ಇಲ್ಲ, ಅವರು ಚುನಾವಣೆಗಳ ಮೂಲಕ ಅಧಿಕಾರ ಪಡೆಯಲು ಸಾಧ್ಯವೂ ಇಲ್ಲ. ಇಂತಹ ಸಮಾಜದವರಲ್ಲಿ ರಾಜಕೀಯ ಶಕ್ತಿ ತುಂಬಲು ಮೀಸಲಾತಿ ಸೌಲಭ್ಯದ ಅಗತ್ಯವಿದೆ ಎಂದು ಹೇಳಿದರು.

ಅತಿ ಹೆಚ್ಚಿನ ಜನಸಂಖ್ಯೆ ಇರುವ ಹಿಂದುಳಿದ ವರ್ಗದವರಿಗೆ ಜನಸಂಖ್ಯೆಗೆ ತಕ್ಕಂತಹ ರಾಜಕೀಯ ಸ್ಥಾನಮಾನ ದೊರೆಯುತ್ತಿಲ್ಲ. ಇಂತಹ ಪರಿಸ್ಥಿಯಲ್ಲಿ ಮೀಸಲಾತಿ ನೀಡಿ ಅವಕಾಶ ಕೊಡಬೇಕು. ಸಹಕಾರ ಕ್ಷೇತ್ರದಲ್ಲಿ ಅವಕಾಶವಿಲ್ಲದ ಸಮಾಜದವರಿಗೆ ಅವಕಾಶ ಕಲ್ಪಿಸಬೇಕು ಎನ್ನುವ ಕಾರಣಕ್ಕೆ ಸಹಕಾರ ಸಚಿವರಾಗಿದ್ದಾಗ ಸಹಕಾರ ಸಂಸ್ಥೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿ ಮಾಡಿದೆ. ಪರಿಶಿಷ್ಟ ಜಾತಿ-ಪಂಗಡದವರಿಗೆ ಲೋಕಸಭೆ ಹಾಗೂ ವಿಧಾನಸಭೆಯ ಕ್ಷೇತ್ರ ಮೀಸಲಾತಿ ನೀಡಿರುವಂತೆ ಹಿಂದುಳಿದ ವರ್ಗದವರಿಗೂ ಮೀಸಲಾತಿ ನೀಡಬೇಕಾದ ಅವಶ್ಯಕತೆ ಇದೆ. ಅವರೂ ಸರ್ಕಾರದಲ್ಲಿ ಧ್ವನಿ ಮಾಡಿ ತಮ್ಮ ಸಮಸ್ಯೆಗಳನ್ನು ಚರ್ಚಿಸಬಹುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ರಮೇಶ್‌ಬಾಬು ಮಾತನಾಡಿ, ಹಿಂದುಳಿದ ವರ್ಗಗಳು ಎಲ್ಲಿಯವರೆಗೆ ರಾಜಕೀಯ ಶಕ್ತಿ ಪಡೆದುಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ನ್ಯಾಯ ಸಿಗುವುದಿಲ್ಲ. ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಬಗ್ಗೆ ಪ್ರಬಲ ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ಸಮೀಕ್ಷೆಯಿಂದ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ, ಜನಸಂಖ್ಯೆಯ ಮಾಹಿತಿ ಸರ್ಕಾರಕ್ಕೆ ದೊರೆಯುತ್ತದೆ. ಅದರ ಆಧಾರದಲ್ಲಿ ಸರ್ಕಾರ ಮೀಸಲಾತಿ, ಮತ್ತಿತರ ಸೌಲಭ್ಯಗಳನ್ನು ಈ ವರ್ಗಗಳಿಗೆ ಹಂಚಲು ಅವಕಾಶವಾಗುತ್ತದೆ. ಸಮೀಕ್ಷೆ ವಿರೋಧಿಸುವವರ ವಿರುದ್ಧ ಹಿಂದುಳಿದ ವರ್ಗದವರು ಗಟ್ಟಿ ಧ್ವನಿಯಲ್ಲಿ ವಿರೋಧಿಸಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್‌ರಾಜ್ ಮೌರ್ಯ, ಬೆಂಗಳೂರು ವಿಭಾಗ ರೈಲ್ವೆ ಮಂಡಳಿ ನಿರ್ದೇಶಕರಾಗಿ ನೇಮಕವಾಗಿರುವ ಧನಿಯಾಕುಮಾರ್, ಮಲ್ಲಸಂದ್ರ ಶಿವಣ್ಣ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಪಿ.ಮೂರ್ತಿ, ಕಾಡುಗೊಲ್ಲಅಭಿವೃದ್ಧಿ ನಿಗಮ ಅಧ್ಯಕ್ಷ ಹಾರೋಗೆರೆ ಮಹೇಶ್, ಕೇಂದ್ರ ವಿವಿ ಸದಸ್ಯ ಕೆ.ಜೆ.ಪರಶುರಾಮ್, ಸವಿತಾ ಸಮಾಜಅಭಿವೃದ್ಧಿ ನಿಗಮ ಅಧ್ಯಕ್ಷ ಮುತ್ತುರಾಜು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular