ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 6 ದಿನಗಳಲ್ಲಿ ತುಮಕೂರು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ-ಮಳೆಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮುಂಜಾಗ್ರತೆ ವಹಿಸಬೇಕೆಂದು ತಿಳಿಸಿದ್ದಾರೆ.
ರಾಜ್ಯದಿಂದ ಸಿಡಿಲು ಬಡಿಯುವ ಪ್ರದೇಶದ ಸಾರ್ವಜನಿಕರಿಗೆ ಮುಂಚಿತವಾಗಿ ರವಾನಿಸುವ SMS Alert ನಂತೆ ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು. ಈ ಸಂದರ್ಭದಲ್ಲಿ ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಹೊಂದಿರುವ ಮನೆ, ಮರ, ವಿದ್ಯುತ್ ಉಪಕರಣ/ಸರಬರಾಜು ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು, ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕು ಎಂದು ಮಾಹಿತಿ ನೀಡಿದ್ದಾರೆ.
ನದಿ/ಹಳ್ಳ/ಕೆರೆ/ದಡ/ಅಪಾಯಕಾರಿಯಾಗಿ ಹರಿಯುವ ನೀರಿನಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ತೊಳೆಯುವುದು, ಪೋಟೋ/ಸೆಲ್ಫಿಗಳನ್ನು ತೆಗೆಯುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆಗಳು ನಡೆಸದಂತೆ ಎಚ್ಚರವಹಿಸಬೇಕು.
ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿ ವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡಗಳು, ದುರ್ಬಲ ಮರದ ಕೊಂಬೆಗಳು, ಜಲಕಾಯ/ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಿಸಬೇಕು. ಕೃಷಿ/ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು ಎಂದರು.
ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ಕಂಬ ಬಿದ್ದಿದ್ದಲ್ಲಿ, ಮನೆಯೊಳಗೆ ಮಳೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ ಸೇರಿದಂತೆ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: 7304975519, 0816-2213400 / 155304, ಬೆಸ್ಕಾಂ-1912, ವಾಟ್ಸ್ ಆಪ್ ಸಂಖ್ಯೆ 8277884019ನ್ನು ಸಂಪರ್ಕಿಸಿ ದೂರು ನೀಡಬೇಕೆಂದು ಮನವಿ ಮಾಡಿದ್ದಾರೆ.


