ಕಬ್ಬಿಗೆ ಹೆಚ್ಚಿನ ದರ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವನ್ನು ಬೆಂಬಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಕಳೆದ 8 ದಿನಗಳಿಂದ ಬೆಳಗಾವಿಯಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಕಬ್ಬು ಬೆಳೆಗಾರರ ಬೇಡಿಕೆಯನ್ನು ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿದರು.
ಕಳೆದ ಹತ್ತಾರು ವರ್ಷಗಳಿಂದ ನೆರೆ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3400-3500 ರೂ. ನೀಡುತ್ತಿವೆ. ಆದರೆ ನಮ್ಮ ರಾಜ್ಯದ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3100 ರೂ. ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ 81 ಕಾರ್ಖಾನೆಗಳಲ್ಲಿ ಸುಮಾರು 50 ಸಕ್ಕರೆ ಕಾರ್ಖಾನೆಗಳು ವಿವಿಧ ಪಕ್ಷಗಳ ಮುಖಂಡರ ಮಾಲೀಕತ್ವದ ಕಾರ್ಖಾನೆಗಳು. ಇವುಗಳು ರೈತರನ್ನು ವಂಚಿಸುತ್ತಲೇ ಬಂದಿವೆ. ಈ ಹಿಂದೆ 110 ದಿನಗಳ ಕಾಲ ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ಹೋರಾಟ ಮಾಡಿದ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ರೈತರಿಗೆ ಏನು ಮಾಡದಿದ್ದರೂ ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದರ ಬದಲು ಕೇಂದ್ರ ಸರ್ಕಾರಕ್ಕೆ ಹೇಳಿ ಹೆಚ್ಚಿನ ಬೆಲೆ ನಿಗದಿಪಡಿಸಲಿ ಎಂದು ಒತ್ತಾಯಿಸಿದರು.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಪಟ್ಟಣದ ಸ್ವಚ್ಛತೆಗೆ ಅನುಕೂಲವಾಗುವಂತೆ ಕಸ ವಿಲೇವಾರಿ ಘಟಕ ಸ್ಥಾಪಿಸಬೇಕು. ಸಂತೆ ಮೈದಾನದಲ್ಲಿ ನಡೆಯುತ್ತಿರುವ ಸಂತೆಯನ್ನು ಎಪಿಎಂಸಿಗೆ ಸ್ಥಳಾಂತರಿಸಿ ಅಲ್ಲಿಗೆ ಬರುವ ಸಾರ್ವಜನಿಕರು, ರೈತರು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಸ್ವಚ್ಛತೆ ಕಾಪಾಡಿ ನೆರಳು, ದೀಪ, ಕುಡಿಯುವ ನೀರು, ಶೌಚಾಲಯ, ತಂಗುದಾಣ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿದರು.
ತಕ್ಷಣ ಜಿಲ್ಲಾಧಿಕಾರಿಗಳು ತುರ್ತು ಪರಿಹಾರ ಸೂಚಿಸಿ ಕಳೆದ 30 ದಿನಗಳಿಂದ ನಡೆಯುತ್ತಿರುವ ದೀರ್ಘ ಹೋರಾಟವನ್ನು ಅಂತ್ಯಗೊಳಿಸಬೇಕು ಎಂದರು.
ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ರಾಜ್ಯ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದೊಡ್ಡಮಾಳಯ್ಯ, ಗುಬ್ಬಿ ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ, ತುಮಕೂರು ತಾಲ್ಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಕೊರಟಗೆರೆ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ ಪಾಲ್ಗೊಂಡಿದ್ದರು.


