ರಾಜ್ಯ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ವತಿಯಿಂದ ಗುರುವಾರ ನಗರದಲ್ಲಿ ರಕ್ತದಲ್ಲಿ ನೂರಾರು ಸಹಿ ಸಂಗ್ರಹಿಸಿ ಎಐಸಿಸಿಗೆ ಕಳುಹಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.
ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ರಾಜ್ಯಾಧ್ಯಕ್ಷ ನಗುತಾ ರಂಗನಾಥ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಹಿತೈಷಿಗಳು ತುಮಕೂರಿನ ಟೌನ್ಹಾಲ್ ಬಳಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ, ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಳಿಕ ರಕ್ತದಲ್ಲಿ ಸಹಿ ಸಂಗ್ರಹಿಸುವ ಮೂಲಕ ಎಐಸಿಸಿಗೆ ಮನವಿ ಪತ್ರವನ್ನು ರವಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆಯ ರಾಜ್ಯಾಧ್ಯಕ್ಷ ನಗುತಾ ರಂಗನಾಥ್, ಪ್ರಸ್ತುತ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿಯೂ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದಾರೆ. ಉಪಮುಖ್ಯಮಂತ್ರಿಯಾಗಿ, ಗೃಹ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ರೇಷ್ಮೆ ಇನ್ನಿತರ ಇಲಾಖೆಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಸಜ್ಜನ ರಾಜಕಾರಣಿಯಾಗಿದ್ದಾರೆ. ಎಐಸಿಸಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪರಮೇಶ್ವರ್ ಪಕ್ಷ ನಿಷ್ಠೆ ಮತ್ತು ಕಾರ್ಯ ವೈಖರಿಯನ್ನು ಹಾಗೂ ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.
ತುಮಕೂರು ನಗರಸಭೆಯ ಮಾಜಿ ಉಪಾಧ್ಯಕ್ಷ ವಾಲೆ ಚಂದ್ರಯ್ಯ, ಕೆಪಿಸಿಸಿ ಯುವ ಕಾಂಗ್ರೆಸ್ ಘಟಕದ ಜಿಲ್ಲಾ ಕಾನೂನು ವಿಭಾಗದ ಮುಖ್ಯಸ್ಥ ಕೋಕಿಲ್ ಸಂದೀಪ, ಸೇನೆ ಉಪಾಧ್ಯಕ್ಷ ಭೀಮಸಂದ್ರ ಮಹೇಶ್, ರಾಜ್ಯ ಕಾರ್ಯಾಧ್ಯಕ್ಷ ಆದೇಶ್.ಸಿ.ಎಂ.,ಗುಲ್ಬರ್ಗ ಜಿಲ್ಲಾಧ್ಯಕ್ಷ ಶ್ರೀಧರ್ ಡಿ.ಇಂಗನಕಲ್ಲು, ಗೋವಿಂದರಾಜು, ಮುಖಂಡರಾದ ಅರಕೆರೆ ಶಂಕಕರ್,ಕೊರಟಗೆರೆ ಮಲ್ಲಿಕಾರ್ಜುನ್, ಮೋಹನಕುಮಾರ್, ಹೆಗ್ಗೆರೆ ಕೃಷ್ಣಮೂರ್ತಿ, ಸಿ.ಭಾನುಪ್ರಕಾಶ್, ಛಲವಾದಿ ಶೇಖರ್, ಬಂಡೆಕುಮಾರ್, ನಾಗಮಣಿ, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ನಾಗಣ್ಣ, ಎನ್.ಕೆ.ನಿಧಿಕುಮಾರ್, ಧರಣೇಂದ್ರಕುಮಾರ್ ಇದ್ದರು.


