ತುಮಕೂರು ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ತಾಲೂಕುವಾರು ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ದೂರುಗಳು ಮತ್ತು ತುರ್ತು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸುವ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ ಗ್ರಾಮ ಪಂಚಾಯತಿವಾರು ಕುಡಿಯುವ ನೀರಿನ ಮೈಕ್ರೋ ಬಯೋಲಾಜಿಕಲ್ ಪರೀಕ್ಷೆ ನಡೆಸಬೇಕು ಹಾಗೂ ವಸತಿ ನಿಲಯಗಳಲ್ಲಿಯೂ ನೀರಿನ ಗುಣಮಟ್ಟ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು.
ಗ್ರಾಮೀಣ ಜಲವಿತರಣಾ ಅಧಿಕಾರಿಗಳು ಜಲಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ವಿಶೇಷವಾಗಿ ಮಧುಗಿರಿ, ಪಾವಗಡ ಮತ್ತು ಸಿರಾ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರಿನ ಗುಣಮಟ್ಟದಲ್ಲಿ ಏರುಪೇರಿನಿಂದ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಎಡಿಸಿ ಡಾ.ಎನ್ ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತೆ ಬಿ.ಶುಭ, ಉಪವಿಭಾಗಾಧಿಕಾರಿಗಳಾದ ನಾಹೀದಾ ಜಮ್ ಜಮ್, ಗೋಟೂರು ಶಿವಪ್ಪ, ಸಪ್ತಶ್ರೀ ಇದ್ದರು.


