ಹಿಂದೆ ಜಾರಿಯಲ್ಲಿದ್ದ ಮನರೇಗಾ ಅಡಿಯಲ್ಲಿ ಎಲ್ಲಾ ವರ್ಗದ ಜನರಿಗೆ ಕೆಲಸವಿತ್ತು. ಮನರೇಗಾ ಬರುವ ಮುನ್ನ ಕೆಲಸ ಹುಡುಕಿಕೊಂಡು ಜನ ವಲಸೆ ಹೋಗುತ್ತಿದ್ದರು. ಮನರೇಗಾ ಅಡಿಯಲ್ಲಿ ಬೇಡಿಕೆಗೆ ಅನುಸಾರವಾಗಿ ಕೆಲಸ ಒದಗಿಸಲಾಗುತ್ತಿತ್ತು. ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಆಹಾರ ಭದ್ರತೆ, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು ಹಕ್ಕು ನೀಡಿದರು. ಈ ಮೂಲಕ ಬಡ ವರ್ಗದ ಜನರಿಗೆ ಅನುಕೂಲ ಕಲ್ಪಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಕಲಾಪದಲ್ಲಿ ವಿಬಿ ಜಿ ರಾಮ್ ಜಿ ಯೋಜನೆ ಕುರಿತಂತೆ ನಡೆದ ಚರ್ಚೆಯಲ್ಲಿ ಅವರು ಮಾತನಾಡಿದರು. ಮಕ್ಕಳನ್ನು ಶಾಲೆಗೆ ಕಳುಹಿಸಿ ಕೂಲಿಗೆ ಹೋಗುತ್ತಿದ್ದರು. ವಿಬಿ ಜಿ ರಾಮ್ ಜಿ ಪ್ರಕಾರ ಕೇಂದ್ರ ಸರ್ಕಾರವೇ ಕೆಲಸ ಎಲ್ಲಿ ನೀಡಬೇಕೆಂದು ತೀರ್ಮಾನಿಸುತ್ತದೆ. ಸಂವಿಧಾನದ 73/74 ತಿದ್ದುಪಡಿಯ ಪ್ರಕಾರ ವಿಕೇಂದ್ರೀಕರಣದಡಿ ಗ್ರಾಮ ಸಭೆಯಲ್ಲಿ ಎಲ್ಲಿ ಕೆಲಸವಾಗಬೇಕೆಂದು ತೀರ್ಮಾನವಾಗುತ್ತಿತ್ತು. ಈಗ ಅದಕ್ಕೆ ತಿಲಾಂಜಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.
ಮನರೇಗಾ ಇಲ್ಲದೇ ಹೋಗಿದ್ದರೆ ಕೋವಿಡ್ -19 ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಬದುಕು ದುಸ್ತರವಾಗುತಿತ್ತು. ಈಗ ಗ್ರಾಮ ಸಭೆಯಲ್ಲೂ ಅಲ್ಲ, ಪಂಚಾಯತಿ ಪ್ರಕಾರ ತೀರ್ಮಾನವಾಗುವುದಿಲ್ಲ. ಇದರಿಂದ ಉದ್ಯೋಗಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ಈಗ ವರ್ಷದಲ್ಲಿ 60 ದಿನ ಕೃಷಿ ಚಟುವಟಿಕೆಗಳು ಇದ್ದ ಸಂದರ್ಭದಲ್ಲಿ ಕೆಲಸಗಳಿಲ್ಲ. ಮನರೇಗಾ ಅಡಿಯಲ್ಲಿ ಕೃಷಿ ಚಟುವಟಿಕೆಗಳಿದ್ದಾಗಲೂ ಕೆಲಸ ಮಾಡಬಹುದಾಗಿತ್ತು. ಇಲ್ಲಿ ಗುತ್ತಿಗೆದಾರರಿಗೆ ನಿಷೇಧವಿತ್ತು ಎಂದು ಹೇಳಿದರು.
ಮನರೇಗಾ ಕಾಯ್ದೆಯಲ್ಲಿ ಗುತ್ತಿಗೆ ಎಂಬ ಪದವೇ ಇಲ್ಲ. ಈಗ ಎಲ್ಲಾ ಗುತ್ತಿಗೆದಾರರು ಪ್ರವೇಶ ಮಾಡಬಹುದಾಗಿದೆ. ಸೇತುವೆ, ಹೆದ್ದಾರಿ, ಮುಂತಾದ ದೊಡ್ಡ ಕೆಲಸಗಳಿಗೆ ಜನ ಹೋಗಬೇಕಾಗುತ್ತದೆ. ಪಂಚಾಯತಿಗಳಿಗೆ ಕೊಟ್ಟಿದ್ದ ಅಧಿಕಾರವನ್ನು ಕಸಿದುಕೊಳ್ಳಲಾಗಿದೆ. ಮನರೇಗಾ ರದ್ದು ಮಾಡಿ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ದುಷ್ಪರಿಣಾಮಗಳ ದೊಡ್ಡ ಪಟ್ಟಿ ಇದೆ. ಅವುಗಳೆಂದರೆ ನಿರುದ್ಯೋಗದ ಪ್ರಮಾಣ ಹೆಚ್ಚಳವಾಗುತ್ತದೆ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆಯಾಗುತ್ತದೆ. ಕನಿಷ್ಠ ವೇತನದ ರಕ್ಷಣೆ ಇಲ್ಲದೆ ಕಾರ್ಮಿಕರು ಸಂಕಷ್ಟಕ್ಕೆ ತಳ್ಳಲ್ಪಡುತ್ತಾರೆ. ದಲಿತ ಮತ್ತು ಆದಿವಾಸಿಗಳ ಕುಟುಂಬಗಳ ಮೇಲೆ ಅಧಿಕ ಒತ್ತಡ ಸೃಷ್ಟಿಯಾಗುತ್ತದೆ. ಗ್ರಾಮೀಣಾಭಿವೃದ್ಧಿಗೆ, ಗ್ರಾಮೀಣ ಬದುಕಿಗೆ ಮಾರಕವಾದ ಕಾಯ್ದೆಯಿದು ಎಂದರು.


