ರಾಜ್ಯದ ಪರಿಶಿಷ್ಟ ಜಾತಿ, ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸಂವಿಧಾನದ ಷಡ್ಯಲ್ 9ಕ್ಕೆ ಸೇರಿಸುವ ಕುರಿತು ರಾಜ್ಯ ಸರಕಾರ 2023ರಲ್ಲಿಯೇ ಪತ್ರ ಬರೆದು ಒತ್ತಾಯಿಸಿದ್ದರೂ ಇದುವರೆಗೂ ಕೇಂದ್ರ ಸರಕಾರವಾಗಲಿ, ರಾಜ್ಯ ಸರಕಾರವಾಗಲಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಪರಿಶಿಷ್ಟರು ಶೇ17 ಮತ್ತು ಪರಿಶಿಷ್ಟ ವರ್ಗದವರು ಶೇ7ರಷ್ಟಿದ್ದು, ನ್ಯಾಯಮೂರ್ತಿ ನಾಗಮೋಹನ್ದಾಸ್ ಸಮಿತಿಯ ವರದಿಯ ಅನ್ವಯ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ 7ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಲ್ಲದೆ, ಇದನ್ನು ಸಂವಿಧಾನದ ಷಡ್ಯೂಲ್ 9ಕ್ಕೆ ಸೇರಿಸುವ ಮೂಲಕ ಪ್ರಶ್ನಾತೀತಗೊಳಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅಂದಿನ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ವಂದಿತ ಶರ್ಮ ಅವರು ಸಹ ಕೇಂದ್ರ ಸರಕಾರಕ್ಕೆ ಪತ್ರ ಬರೆದು, ತುರ್ತಾಗಿ ಕ್ರಮ ಕೈಗೊಳ್ಳುವಂತೆ 2023ರ ಮಾರ್ಚ್ 23ರಂದು ಮನವಿ ಮಾಡಿದ್ದಾರೆ.
ಆದರೆ ಕಳೆದ ಮೂರು ವರ್ಷಗಳಿಂದ ಕೇಂದ್ರವಾಗಲಿ, ರಾಜ್ಯವಾಗಲಿ ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಾಮಾಜಿಕ ನ್ಯಾಯದ ಪರ ಎನ್ನುವ ಸಿದ್ದರಾಮಯ್ಯ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಾಲ್ಮೀಕಿ ಸಮುದಾಯದ ಹಿನ್ನಡೆಗೆ ಕಾರಣವಾಗಿದೆ. ಹಾಗಾಗಿ ಶೀಘ್ರವೇ ಎರಡು ಸರಕಾರಗಳು ಈ ಬಗ್ಗೆ ತಮ್ಮ ಸ್ಪಷ್ಟ ನಿಲುವು ಪ್ರಕಟಿಸಬೇಕು. ಇಲ್ಲದಿದ್ದರೆ ಇಡೀ ಸಮುದಾಯ ಹೋರಾಟಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದರು.
ಪ್ರಧಾನಮಂತ್ರಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ನಮ್ಮ ಒತ್ತಾಯವೇನೆಂದರೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಿರುವ ಮೀಸಲಾತಿ ಪ್ರಮಾಣವನ್ನು ಸಂವಿಧಾನದ ಷಡ್ಯಲ್ 9ರ ಅಡಿಗೆ ತರುವ ಮೂಲಕ ರಕ್ಷಣೆ ನೀಡಬೇಕು. ಹಾಗೆಯೇ ಸಂವಿಧಾನ ಪರಿಚ್ಛೇಧ 15-16ಕ್ಕೆ ತಿದ್ದುಪಡಿ ತಂದು ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಬೇಕು. ಶೇ7.5ರಷ್ಟಿರುವ ಜನಸಂಖ್ಯೆಗೆ ಶೇ10ರಷ್ಟು ಮೀಸಲಾತಿ ಕಲ್ಪಿಸಲು ಇದ್ದ ತರಾತುರಿ ಪರಿಶಿಷ್ಟ ಜಾತಿ, ವರ್ಗಗಳ ಬಗ್ಗೆ ಏಕೆ ಇಲ್ಲ ಎಂಬ ಪ್ರಶ್ನೆ ನಮ್ಮದು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಗಾಗಿ ಎಂತಹ ಹೋರಾಟಕ್ಕೂ ಸಮುದಾಯ ಸಿದ್ದವಿದೆ. ಇದಕ್ಕಾಗಿ ಯಾವ ತ್ಯಾಗಕ್ಕೂ ನಾವು ಸಿದ್ದ ಎಂದು ವಿ.ಎಸ್.ಉಗ್ರಪ್ಪ ತಿಳಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಕಾರ್ಯಾಧ್ಯಕ್ಷ ಎಂ.ನರಸಿAಹಯ್ಯ, ಖಜಾಂಚಿ ರಾಜಪ್ಪ, ಪ್ರಧಾನ ಕಾರ್ಯದರ್ಶಿ ಜಯಶ್ರೀ ಗುಡ್ಡಕಾಯ, ಉಪಾಧ್ಯಕ್ಷರಾದ ರಾಜಣ್ಣ.ಟಿ., ತುಮಕೂರಿನ ಹೆಚ್.ಸಿ.ಹನುಮಂತಯ್ಯ ಇದ್ದರು.


