ರಾಜ್ಯ ಸರ್ಕಾರವು ಅಭಿವೃದ್ಧಿ ಕೆಲಸಗಳಿಗಿಂತ ಪ್ರಚಾರಕ್ಕೇ ಹೆಚ್ಚು ಒತ್ತು ನೀಡುತ್ತಿದ್ದು, ಜನರ ತೆರಿಗೆ ಹಣವನ್ನು ನೂರಾರು ಕೋಟಿ ರೂಪಾಯಿ ವೆಚ್ಚ ಮಾಡಿ ಜಾಹೀರಾತಿಗಾಗಿ ಪೋಲು ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಗರದ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ‘ಜನಸ್ಪಂದನ’ದ 100ನೇ ವಾರದ ಆಚರಣೆ, ಸರ್ಕಾರಿ ಸವಲತ್ತುಗಳ ವಿತರಣೆ ಹಾಗೂ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿ ತುಂಬುವ ಕೆಲಸವಾಗಬೇಕಿತ್ತು. ಆದರೆ ಇಂದು ಜನರನ್ನು ಕೈಯೊಡ್ಡುವ ಪರಿಸ್ಥಿತಿಗೆ ದೂಡಲಾಗಿದೆ. ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸೆಂದರೆ ಸ್ವಾವಲಂಬನೆಯೇ ಹೊರತು ಬೇಡುವುದಲ್ಲ ಎಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದರು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಂವಿಧಾನದ ಪೀಠಿಕೆ ಓದಿ ಜಾತ್ಯತೀತರು ಎಂದು ಹೇಳಿಕೊಳ್ಳುವವರೇ, ರಾಜಕೀಯ ಲಾಭಕ್ಕಾಗಿ ಜಾತಿಗಳನ್ನು ಒಡೆಯುತ್ತಿದ್ದಾರೆ ಎಂದು ಹೇಳಿದರು.
ಕೃತಕ ಬುದ್ಧಿಮತ್ತೆ ಕಾಲದಲ್ಲೂ ನಮ್ಮಲ್ಲಿ ಜಾತಿ ರಾಜಕಾರಣ ನಡೆಯುತ್ತಿರುವುದು ದುರಂತ. ಕೇವಲ ಪ್ರಚಾರದಲ್ಲಿ ಮಾತ್ರ ಅಭಿವೃದ್ಧಿ ಕಾಣುತ್ತಿದೆ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಚಾರಕ್ಕಿಂತ ಕರ್ತವ್ಯಕ್ಕೆ ಆದ್ಯತೆ ನೀಡಿದ್ದೆ. ಈಗ ಕೆಲಸಕ್ಕಿಂತ ಪ್ರಚಾರವೇ ಜಾಸ್ತಿಯಾಗಿದೆ ಎಂದು ಟೀಕಿಸಿದರು.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಮಾತನಾಡಿ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಮಾದರಿಯನ್ನು ನೆನಪಿಸಿಕೊಂಡರು ಹಾಗೂ ತಾಲೂಕಿನಲ್ಲಿ ಕೈಗಾರಿಕೆ ತೆರೆಯುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದರು.
ಶಾಸಕ ಸಿ.ಬಿ. ಸುರೇಶ್ ಬಾಬು, ತಾಲೂಕಿಗೆ ಮೈಸೂರಿನ ಕಡೆಯಿಂದ ಚಿತ್ರದುರ್ಗಕ್ಕೆ ರೈಲು ಮಾರ್ಗ ಹಾಗೂ ಬೃಹತ್ ಕೈಗಾರಿಕೆಯನ್ನು ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬಸವರಾಮಾನಂದ ಸ್ವಾಮೀಜಿ, ಸತ್ಕೀರ್ತಿನಾಥ ಸ್ವಾಮೀಜಿ, ಶಂಭುನಾಥ ಸ್ವಾಮೀಜಿ, ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, ಹಿರಿಯ ಅಧಿಕಾರಿಗಳು ಇದ್ದರು.


