ತುಮಕೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವರಾಯನದುರ್ಗದಲ್ಲಿ ರೋಪ್ ವೇ ನಿರ್ಮಿಸುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಸುರೇಶ್ಗೌಡ ಹೇಳಿದ್ದಾರೆ.
ದೇವರಾಯನದುರ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸುರೇಶ್ ಗೌಡ, ರೋಪ್ ವೇ ನಿರ್ಮಾಣದ ಬಗ್ಗೆ ಇಲಾಖೆ ಅಧಿಕಾರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಕನಿಷ್ಠ 61 ಕೋಟಿ ರೂ.ನಿಂದ ಗರಿಷ್ಠ 150 ಕೋಟಿ ರೂ. ವೆಚ್ಚದಲ್ಲಿ ರೋಪ್ ವೇ ನಿರ್ಮಿಸುವ ಚರ್ಚೆಯಾಯಿತು. ಗಣಿ ಇಲಾಖೆಯಡಿ ಪರಿಸರ ಪುನರ್ ನಿರ್ಮಾಣಕ್ಕಾಗಿ ಲಭ್ಯವಿರುವ ಅನುದಾನದಲ್ಲಿ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರ ಜೊತೆಗೆ ನಾಮದ ಚಿಲುಮೆ ಸುತ್ತಮುತ್ತಲಿನ ಪರಿಸರದಲ್ಲಿ ಪೂರ್ಣ ಪ್ರಮಾಣದ ಪ್ರಾಣಿ ಸಂಗ್ರಹಾಲಯ ಸ್ಥಾಪಿಸಲೂ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.
ದೇವರಾಯನದುರ್ಗವು ಸಮುದ್ರ ಮಟ್ಟದಿಂದ 3,904 ಅಡಿ ಎತ್ತರದಲ್ಲಿದ್ದು, 4,117 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯ ವ್ಯಾಪಿಸಿಕೊಂಡಿದೆ. ಇದೊಂದು ಸುರಕ್ಷಿತ ಅರಣ್ಯ ಪ್ರದೇಶ. ಇಲ್ಲಿ 1200 ಅಡಿ ಎತ್ತರದಲ್ಲಿ ರೋಪ್ ವೇ ಇರಬೇಕು. ಅದು ಮೋನೋ ಕೇಬಲ್ ಇರಬೇಕೆ ಅಥವಾ ಎರಡು-ಮೂರು ಕೇಬಲ್ ಇರಬೇಕೆ ಎಂಬ ಬಗ್ಗೆ ಸಾಧ್ಯಾಸಾಧ್ಯತೆ ನೋಡಿಕೊಂಡು ತೀರ್ಮಾನಿಸಲಾಗುವುದು. ದಿನದಲ್ಲಿ ಎರಡು ಸಾವಿರದಂತೆ ವಾರ್ಷಿಕ 4 ಲಕ್ಷ ಜನ ಪ್ರವಾಸಿಗರು ಭೇಟಿ ಮಾಡುವರು, ಅದರಿಂದ ವಾರ್ಷಿಕ 15 ಕೊಟಿ ರೂ. ಸೃಷ್ಟಿಯಾಗಬಹುದು ಎಂದು ಲೆಕ್ಕ ಹಾಕಲಾಗಿದೆ ಎಂದು ಹೇಳಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು, ಇತಿಹಾಸ ಪ್ರಸಿದ್ಧ ದೇವರಾಯನದುರ್ಗವು ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಣವಾಗಿದೆ. ದೇವರಾಯನದುರ್ಗದಲ್ಲಿ ರೋಪ್ ವೇ ಮತ್ತು ಪ್ರಾಣಿ ಸಂಗ್ರಹಾಲಯ ಸ್ಥಾಪಿಸಿದರೆ ಇದೊಂದು ಅತ್ಯುತ್ತಮ ಆಕರ್ಷಣೀಯ ಪ್ರವಾಸಿ ಕೇಂದ್ರವಾಗಲಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪವಿತ್ರ, ವಲಯ ಅರಣ್ಯಾಧಿಕಾರಿ ನಮಿತಾ, ಅಧಿಕಾರಿಗಳು ಹಾಜರಿದ್ದರು.


