Wednesday, March 4, 2026
Google search engine
Homeಮುಖಪುಟ'ಡಾ.ಜಿ. ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡಿ'

‘ಡಾ.ಜಿ. ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡಿ’

ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಮಾನ ಮನಸ್ಕರು ವೇದಿಕೆ ಪ್ರಧಾನ ಸಂಚಾಲಕ ಬಿ.ಎಸ್. ಪ್ರಸನ್ನಕುಮಾರ್ ಮನವಿ ಮಾಡಿದರು.

ತುಮಕೂರು ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಪಿ.ಹೆಚ್.ಡಿ ಪದವಿ ಪಡೆದು, ಮಾಜಿ ಪ್ರಧಾನಿ ದಿವಂಗತ ರಾಜೀವ್‌ಗಾಂಧಿ ಅವರ ಕೋರಿಕೆಯ ಮೇರೆಗೆ ಕಾಂಗ್ರೆಸ್ ಪಕ್ಷವನ್ನು ಸೇರಿ ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷವನ್ನು ಸಂಘಟಿಸುತ್ತಾ ಬಂದಿದ್ದಾರೆ. ಇಂತಹ ಪಕ್ಷನಿಷ್ಠ, ಕಾಂಗ್ರೆಸ್ ಕಟ್ಟಾಳು ಡಾ. ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.

1989 ರಲ್ಲಿ ಮೊದಲ ಬಾರಿಗೆ ಮಧುಗಿರಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಡಾ. ಜಿ. ಪರಮೇಶ್ವರ್ ಗೆಲುವು ಸಾಧಿಸಿ 1992 ರಿಂದ 94ರವರೆಗೆ ವೀರಪ್ಪಮೊಯ್ಲಿ ಸಚಿವ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕೆಲಸ ಮಾಡಿದರು. ತದ ನಂತರ 1999ರ ಎಸ್.ಎಂ.ಕೃಷ್ಣ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ, ವಿಜ್ಞಾನ ಮತ್ತು ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ವಾರ್ತಾ ಮತ್ತು ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ ತುಮಕೂರು ವಿಶ್ವವಿದ್ಯಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾಗಿ 2010 ರಿಂದ 2018 ರವರೆಗೆ ಸತತ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿ, ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವಂತೆ ಮಾಡುವಲ್ಲಿ ಡಾ.ಜಿ.ಪರಮೇಶ್ವರ್ ಶ್ರಮ ದೊಡ್ಡದು. ವಿಧಾನಪರಿಷತ್ ಸದಸ್ಯರಾಗಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮೊಟ್ಟ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾಗಿ ಕೆಲಸ ಮಾಡಿದ್ದರು. 2018ರ ಚುನಾವಣೆಯ ನಂತರ ರಚಿತವಾದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿಯ ಪ್ರಣಾಳಿಕೆ ಅಧ್ಯಕ್ಷರಾಗಿ, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಮುನ್ನುಡಿ ಬರೆದವರು ಡಾ. ಜಿ.ಪರಮೇಶ್ವರ್. ಪ್ರಸ್ತುತ ಕಳೆದ ಮೂರು ವರ್ಷಗಳಿಂದ ಗೃಹ ಸಚಿವರಾಗಿ ಕರ್ನಾಟಕದ ಕಾನೂನು ಸುವ್ಯವಸ್ಥೆಯನ್ನು ಹತೋಟಿಯಲ್ಲಿಡುವಲ್ಲಿ, ಕೋಮು ಗಲಭೆಗಳನ್ನು ಯಶಸ್ವಿಯಾಗಿ ತಡೆಯುವಲ್ಲಿ ಡಾ. ಜಿ. ಪರಮೇಶ್ವರ್ ಬೌದ್ಧಿಕ ಶಕ್ತಿ ಕೆಲಸ ಮಾಡಿದೆ ಎಂದರು.

ಪಕ್ಷ ನಿಷ್ಠೆಗೆ ಹೆಸರಾಗಿರುವ ಡಾ. ಜಿ. ಪರಮೇಶ್ವರ್ ವಿದ್ಯಾವಂತರು, ಪಕ್ಷದ ಎಲ್ಲಾ ಹಂತದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪಕ್ಷ ಹಾಗೂ ಸರ್ಕಾರದ ಎಲ್ಲಾ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸಿದ ಚಾಕುಚಕ್ಯತೆ ಇದೆ. ಎಲ್ಲಾ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಗುಣವಿದೆ. 2013 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಇಡೀ ರಾಜ್ಯವನ್ನು ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತಂದು, ತಾವು ಸೋಲು ಅನುಭವಿಸಿ, ಮುಖ್ಯಮಂತ್ರಿಯಾಗುವ ಅವಕಾಶದಿಂದ ವಂಚಿತರಾದರು. ಮುಖ್ಯಮಂತ್ರಿಯಾಗುವ ಅವಕಾಶ ಸಿದ್ದರಾಮಯ್ಯ ಅವರಿಗೆ ಅನಾಯಾಸವಾಗಿ ದೊರೆಯಿತು.

ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಈಗಾಗಲೇ ಏಳುವರೆ ವರ್ಷ ಪೂರೈಸಿದ್ದಾರೆ. ಸಿದ್ದರಾಮಯ್ಯನವರ ಹಿಂದೆ ಲಕ್ಷ್ಮಣನ ರೀತಿ ಡಾ. ಜಿ. ಪರಮೇಶ್ವರ್ ಗಟ್ಟಿಯಾಗಿ ನಿಂತು ರಾಜ್ಯದ ಆಗು ಹೋಗುಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮನವೊಲಿಸಿ ಸಜ್ಜನ ರಾಜಕಾರಣಿ ಡಾ. ಜಿ. ಪರಮೇಶ್ವರ್ ಅವರನ್ನು ತಮ್ಮ ಸ್ಥಾನಕ್ಕೆ ಆಯ್ಕೆ ಮಾಡಿ, ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿ ಪೂರ್ಣಗೊಳ್ಳುವವರೆಗೆ ಅವರ ಬೆನ್ನಿಗೆ ನಿಂತು ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸಮಾನ ಮನಸ್ಕರು ಸಂಚಾಲಕರಾದ ಬಿ.ಜಿ. ಲಿಂಗರಾಜು, ಟಿ. ಶಿವಕುಮಾರ್, ವಿಜಯನಗರ ಜಿಲ್ಲೆಯ ಸೋಮಪ್ಪ, ಬಿಜಾಪುರದ ರವಿಕುಮಾರ್, ಚಿತ್ರದುರ್ಗ ಜಿಲ್ಲೆ ಕೆಂಚಪ್ಪ, ಮಧುಗಿರಿಯ ಸಿದ್ದಾಪುರ ರಂಗಶಾಮಣ್ಣ, ಮಂಜುನಾಥ್ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular