ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ ಆರೈಕೆ ಮತ್ತು ರೋಗಿಗಳಿಗೆ ಪೌಷ್ಠಿಕ ಆಹಾರ ನೀಡುವಲ್ಲಿ ವಿಫಲತೆ ಸೇರಿದಂತೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆ ಇರುವುದನ್ನು ಕಂಡ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕಿಡಿಕಿಡಿಯಾದರು.
ಶುಕ್ರವಾರ ತುಮಕೂರು ಜಿಲ್ಲಾಸ್ಪತ್ರೆಗೆ ಆಯೋಗದ ಸದಸ್ಯ ಡಾ: ಕೆ.ಟಿ. ತಿಪ್ಪೇಸ್ವಾಮಿ ಅವರೊಂದಿಗೆ ಭೇಟಿ ನೀಡಿದ ಅವರು, ಮಕ್ಕಳ ವಿಭಾಗದ ಶಿಶು ಆರೈಕೆ ಘಟಕ ಮತ್ತು ಇತ್ಯಾದಿ ಕಡೆಗಳಲ್ಲಿ ಪರಿಶೀಲಿಸಿ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಸಂಬಂಧಿಸಿದ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಭೇಟಿ ನೀಡಿದ ಸಂದರ್ಭದಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯೇ ಕೆಟ್ಟುಹೋಗಿದ್ದು, ಒಂದೇ ವಾರ್ಡಿನಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡುವುದರಿಂದ ಒಂದು ಮಗುವಿಗೆ ಇರುವ ರೋಗ ಮತ್ತೊಂದು ಮಗುವಿಗೆ ಹರಡುವ ಸಾಧ್ಯತೆಯಿರುತ್ತದೆ. ಆದರೆ ಈ ಬಗ್ಗೆ ಆಸ್ಪತ್ರೆ ವೈದ್ಯರು ನಿಗಾವಹಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಿಶುಗಳ ಕಳವಿನ ಪ್ರಕರಣಗಳು ರಾಜ್ಯದ ವಿವಿಧೆಡೆ ಅಲ್ಲಲ್ಲಿ ದಾಖಲಾಗುತ್ತಿದ್ದು, ಶಿಶುಗಳ ಆರೈಕೆ ಕೇಂದ್ರದಲ್ಲಿ ಸರಿಯಾದ ದಾಖಲೆಗಳನ್ನು ಹಾಗೂ ಸಿಸಿ ಟಿವಿ ಸೇರಿದಂತೆ ಭದ್ರತೆ ವ್ಯವಸ್ಥೆ ಒದಗಿಸಬೇಕಿದೆ. ಜಿಲ್ಲಾಸ್ಪತ್ರೆಯಲ್ಲಿ ಈ ವಿಚಾರದಲ್ಲೂ ಕೊರತೆಯನ್ನು ಗಮನಿಸಲಾಯಿತು.
ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಕುರಿತು ಫಲಕಗಳನ್ನು ಅಳವಡಿಸದೇ ಇರುವ ಬಗ್ಗೆ ಠಾಣೆಯ ಸಬ್ ಇನ್ಸ್ಪೆಕ್ಟರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳು, ಪೋಕ್ಸೋ ಕಾಯ್ದೆ ಸೇರಿದಂತೆ ಈಗಾಗಲೇ ಪೊಲೀಸ್ ಇಲಾಖೆಗೆ ತರಬೇತಿ ನೀಡಿದ ನಂತರವೂ ಪೊಲೀಸ್ ಠಾಣೆಯಲ್ಲಿ ಫಲಕಗಳನ್ನು ಹಾಕದಿರುವ ಬಗ್ಗೆ ಅವರು ಅಸಮಧಾನ ವ್ಯಕ್ತಪಡಿಸಿದರು.
ತುಮಕೂರಿನ ಗುರುಸ್ಪರ್ಶ ಸ್ಕ್ಯಾನಿಂಗ್ಸ್ಕಾ ಸೆಂಟರ್ಗೆ ಭೇಟಿ ನೀಡಿದ ನಿಯೋಗವು ಪ್ರಸವಪೂರ್ವ ಗರ್ಭ ಪರೀಕ್ಷಾ ತಪಾಸಣೆ ಬಗ್ಗೆ ಸರಿಯಾದ ದಾಖಲೆಗಳನ್ನು ಸಾದರಪಡಿಸದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಪ್ರಸ್ತುತ ದಿನಗಳಲ್ಲಿ ಗರ್ಭ ತಪಾಸಣೆಯಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೂ. ನಿಯಮಾನುಸಾರ ದಾಖಲೆಗಳನ್ನು ಇಟ್ಟಿಲ್ಲ ಎಂಬ ಕಾರಣಕ್ಕೆ ಇದನ್ನು ಸರಿಯಾಗಿ ನಿಗಾವಹಿಸುತ್ತಿಲ್ಲ ಎಂಬ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿಗೆ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪವಿತ್ರ ಆರ್.ಜಿ., ಜಿಲ್ಲಾ ಶಸ್ತç ಚಿಕಿತ್ಸಕ ಅಸ್ಗರ್ ಬೇಗ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವರ್ಣೇಕರ್ ಇದ್ದರು.


