ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ನೀಡಿ ನಂತರ 56437 ಹುದ್ದೆಗಳನ್ನು ಭರ್ತಿ ಮಾಡುವಂತೆ ಹಾಗೂ ಎಸ್ಸಿ-ಎಸ್ಟಿ ಸಮುದಾಯಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಮಾಯಿಸಿದ ಸಮುದಾಯದ ಮುಖಂಡರು ಮೀಸಲಾತಿ ನಮ್ಮ ಹಕ್ಕು, ಭಿಕ್ಷೆಯಲ್ಲ ಎಂಬ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಕುಪ್ಪೂರು ಶ್ರೀಧರ್, ರಾಜ್ಯ ಸರ್ಕಾರ 2022ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾತಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. 7 ರಷ್ಟು ರಾಜ್ಯ ಸರ್ಕಾರ ಹೆಚ್ಚಿಸಿದೆ. ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸದೆ ನಿರ್ಲಕ್ಷ್ಯ ತೋರಿದ್ದು, ಅತಿ ಶೀಘ್ರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂವಿಧಾನದ 9ನೇ ಷಡ್ಯುಲ್ಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ಸುಮಾರು 56,437 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದು ಸರಿಯಷ್ಟೆ. ಆದರೆ 2022 ರಲ್ಲಿ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳಿಗೆ ಹೆಚ್ಚಿಸಿರುವ ಮೀಸಲಾತಿಯನ್ನು ಕೈಬಿಟ್ಟು ಹಳೆಯ ಮಾದರಿಯ ಮೀಸಲಾತಿ ಅಡಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಎಸ್ಸಿ ಹಾಗೂ ಎಸ್ಟಿ ಸಮುದಾಯಗಳು ಖಂಡಿಸುತ್ತವೆ. 2022ರ ಮೀಸಲಾತಿ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಂಗದಹಳ್ಳಿ ರಾಜಕುಮಾರ್, ನಿವೃತ್ತ ಅಬಕಾರಿ ಅಧಿಕಾರಿ ನಾಗರಾಜು, ನಿವೃತ್ತ ಬಿಇಓ ಪಿ.ಬಿ. ಬಸವರಾಜು, ರಾಮಚಂದ್ರಪ್ಪ, ಸೋಲಾರ್ ರಾಜು, ವಿದ್ಯಾರ್ಥಿ ಘಟಕದ ನವೀನ್, ಮಂಜುನಾಥ್, ಕುಂದೂರು ಮುರುಳಿ, ನಾಗರಾಜು, ಅಡವೀಶಸ್ವಾಮಿ, ಪುರುಷೋತ್ತಮ, ಶಿವಕುಮಾರ್, ಪ್ರಕಾಶ್ ಹೆಚ್., ಸರಸ್ವತಿ, ಯಶೋಧಮ್ಮ, ಯೋಗೇಂದ್ರಬಾಬು ಪಾಲ್ಗೊಂಡಿದ್ದರು.


