ಅಡುಗೆ ಅನಿಲ ದರ ಏರಿಕೆ ಖಂಡಿಸಿ, ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೇ ಕಾರಣವೆಂದು ಆಪಾದಿಸಿ, ಕೇಂದ್ರ ಸರ್ಕಾರದ ವಿರುದ್ಧ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಗುರುವಾರ ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಾ.ಎಸ್.ರಫೀಕ್ಅಹ್ಮದ್ , ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಯುದ್ಧ ನಡೆಯುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮೊದಲೇ ಗೊತ್ತಿದ್ದರೂ ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದ ಕಾರಣ ಇಂದು ಜನಸಾಮಾನ್ಯರಿಗೆ ಅಡುಗೆ ಅನಿಲದ ಸಮಸ್ಯೆ ಎದುರಾಗಿದೆ. ಈ ನಡುವೆ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಕೆಲವು ಕಡೆ ಹೆಚ್ಚು ಹಣ ಕೊಟ್ಟರೂ ಅನಿಲ ಸಿಲಿಂಡರ್ ಸಿಗದಂತಹ ಪರಿಸ್ಥಿತಿ ಎದುರಾಗಿದೆ ಎಂದರು.
ಯುದ್ಧ ಹೀಗೆ ಮುಂದುವರೆದರೆ ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಾಗುವ ಆತಂಕವಿದೆ. ಇಂಧನ ದರ ಹೆಚ್ಚಿದರೆ ಸರಕು ಸಾಗಾಣಿಕೆ ವೆಚ್ಚ ಅಧಿಕವಾಗಿ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರಿಗೆ ಹೊರೆಯಾಗುತ್ತದೆ. ಇದೆಲ್ಲವೂ ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಫಲ್ಯದ ಫಲ. ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಗಳನ್ನು ಪರಿಹರಿಸಬೇಕು, ಇಲ್ಲವೇ ಪ್ರಧಾನಿ ಮೋದಿ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ನಮ್ಮ ದೇಶದ ಆಡಳಿತ ಎತ್ತ ಸಾಗುತ್ತಿದೆ? ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿ, ಅನಿಲ ಅಭಾವ ಸೃಷ್ಟಿಯಾಗಿ ಜನರು ತೊಂದರೆ ಅನುಭವಿಸುತ್ತಿದ್ದರೂ ಯಾವುದೇ ಪರಿಹಾರ ಕ್ರಮ ತೆಗೆದುಕೊಳ್ಳದ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದರು.
ಕಾಂಗ್ರೆಸ್ ಆಡಳಿತವನ್ನು ಟೀಕಿಸುತ್ತಾ ಬಂದಿರುವ ಬಿಜೆಪಿಯವರು, ಕಾಂಗ್ರೆಸ್ ಆಡಳಿತದಲ್ಲಿ ಯಾವತ್ತೂ ಇಂತಹ ದುಸ್ಥಿತಿ ಬಂದಿರಲಿಲ್ಲ, ಕೇಂದ್ರದ ಮೋದಿ ಸರ್ಕಾರ ದೇಶವನ್ನು 50 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗಿದೆ ಎಂದು ಟೀಕಿಸಿದರು.
ಮುಖಂಡ ಇಕ್ಬಾಲ್ ಅಹ್ಮದ್ ಮಾತನಾಡಿ, ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿದಂತೆ ನಡೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಜನರ ಹಿತ ಬೇಕಾಗಿಲ್ಲ, ಅಡುಗೆ ಅನಿಲ ದರ ಏರಿಸಿ ಜನರಿಗೆ ಹೊರೆ ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತೆ ಎತ್ತಿನಗಾಡಿ, ಜಟಕಾಗಾಡಿ, ಸೌದೆ ಒಲೆ ವ್ಯವಸ್ಥೆಗೆ ಜನರನ್ನು ಒಯ್ಯುತ್ತಿದೆ. ಇದೇನಾ ಇವರ ವಿಕಸಿತ ಭಾರತ? ಎಂದು ಟೀಕೆ ಮಾಡಿದರು.
ದೇಶಕ್ಕೆ ಗಂಡಾAತರ ಬಂದಿರುವ ಸಂದರ್ಭದಲ್ಲಿ ವಿದೇಶಾಂಗ ನೀತಿಯನ್ನು ಸರಿಪಡಿಸಿ ಜನರ ಸಮಸ್ಯೆಗೆ ಸ್ಪಂದಿಸಬೇಕು, ಆಗದಿದ್ದರೆ ರಾಜೀನಾಮೆ ಕೊಟ್ಟು ಅಧಿಕಾರ ತ್ಯಜಿಸಿರಿ ಎಂದು ಒತ್ತಾಯಿಸಿದರು.
ಮುಖಂಡ ಎನ್.ಗೋವಿಂದರಾಜು ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ಎಂ.ಮಹೇಶ್, ಫಯಾಜ್ ಅಹ್ಮದ್, ನಗರಪಾಲಿಕೆ ಮಾಜಿ ಸದಸ್ಯ ಸೈಯದ್ ನಯಾಜ್ ಅಹ್ಮದ್, ಮುಖಂಡರಾದ ಷಣ್ಮುಖಪ್ಪ, ರೇವಣ್ಣಸಿದ್ಧಯ್ಯ, ಕೆಂಪಣ್ಣ, ಮೆಹಬೂಬ್ ಪಾಷಾ, ಆಟೋರಾಜು, ಬಿ.ಜಿ.ನಿಂಗರಾಜು, ಸುಜಾತ, ಅಂಬರೀಷ್, ಶಿವಾಜಿ, ನಟರಾಜಶೆಟ್ಟಿ, ಪಂಡಿತ್ ನಾರಾಯಣಪ್ಪ, ಜ್ವಾಲಮಾಲ ರಾಜಣ್ಣ, ಭಾಗ್ಯಮ್ಮ, ನಾಗಮಣಿ, ಕೆಂಪರಾಜು, ನಾಗಮಣಿ, ವಿಜಯಲಕ್ಷಿö್ಮ, ವೆಂಕಟೇಶ್, ಬೈಲಾಸ್ವಾಮಿ, ಕೈದಾಳ ರಮೇಶ್ ಭಾಗವಹಿಸಿದ್ದರು.


