ಒಳ ಮೀಸಲಾತಿ ಜಾರಿಗೊಳಿಸಿ ನೇಮಕಾತಿ ಮಾಡಿಕೊಳ್ಳದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಡಾ.ಬಾಬು ಜಗಜೀವನರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯನ್ನು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದರು.
ಬಾಬೂಜಿ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಮಾಡುವ ಸಂಬಂಧ ತುಮಕೂರಿನ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗುರುವಾರ ದಲಿತ ಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಆಗಮಿಸಿದ ದಲಿತ ಮುಖಂಡರು ಒಳ ಮೀಸಲಾತಿ ಜಾರಿಗೊಳಿಸುವ ವಿಷಯ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ನೀಡಿದ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆಯನ್ನು ಈಡೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿದೆ. ಹೀಗಾಗಿ ದಲಿತ ಸಮುದಾಯದ ಎರಡು ಕಣ್ಣುಗಳಾಗಿರುವ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಗಳನ್ನು ಕಾಂಗ್ರೆಸ್ ಸರ್ಕಾರ ಆಚರಿಸುವ ನೈತಿಕತೆ ಇಲ್ಲವಾಗಿದೆ ಎಂದು ಹೇಳುತ್ತಾ ಹೋರಾಟಗಾರ ವೈ.ಕೆ.ಬಾಲಕೃಷ್ಣಪ್ಪ ನೇತೃತ್ವದಲ್ಲಿ ಸಭೆಯನ್ನು ಬಹಿಸ್ಕರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಒಳ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣಪ್ಪ, 32 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಮ್ಮ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದೆ. ಆದರೆ ಒಳ ಮೀಸಲಾತಿ ಜಾರಿಗೊಳಿಸದೆ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಟೀಕಿಸಿದರು.
ಮೊದಲು ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದ ರಾಜ್ಯ ಸರ್ಕಾರ ಈಗ ಮಾತಿಗೆ ತಪ್ಪಿದೆ. 27-02-2026ರಂದು ಕರ್ನಾಟಕ ಸರ್ಕಾರ ಹುದ್ದೆಗಳ ಭರ್ತಿಗೆ ಒಂದು ದಿನ ಹೋರಾಟ ನಡೆಸಿದರು. ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ 56 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಯಿತು. ಒಳ ಮೀಸಲಾತಿಗಾಗಿ 32 ವರ್ಷದಿಂದಲೂ ಹೊರಾಟ ನಡೆಸಿಕೊಂಡು ಬಂದರೂ ಅದಕ್ಕೆ ಮನ್ನಣೆ ನೀಡದ ಸರ್ಕಾರ ಆತ್ಮವಂಚನೆ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಿದಾಗ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಒಳ ಮೀಸಲಾತಿ ಜಾರಿಗೊಳಿಸಿ ನೇಮಕಾತಿ ಮಾಡುತ್ತೇವೆ ಎಂದು ಭರವಸೆ ನೀಡಲಾಯಿತು. ಆದರೆ ಈಗ ಸರ್ಕಾರ ಮಾತಿಗೆ ತಪ್ಪಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಡಾ.ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗಳನ್ನು ಆಚರಣೆ ಮಾಡಲು ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಳ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಪಾವಗಡ ಶ್ರೀರಾಂ ಮಾತನಾಡಿ, ಒಳ ಮೀಸಲಾತಿ ಜಾರಿಗೊಳಿಸದ ರಾಜ್ಯ ಸರ್ಕಾರಕ್ಕೆ ನೈತಿಕತೆ ಇರುವುದಿಲ್ಲ. ಹೀಗಾಗಿ ದಲಿತ ಕಣ್ಮಣಿಗಳಾದ ಬಾಬು ಜಗಜೀವನರಾಂ, ಹಾಗೂ ಡಾ.ಬಿ.ಆರ್.ಆಂಬೇಡ್ಕರ್ ಜಯಂತಿ ಯನ್ನು ಆಚರಿಸಲು ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.


