ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ತೀರ್ಮಾನವನ್ನು ಮರು ಪರಿಶೀಲಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿರುವ ರಾಜ್ಯಪಾಲರ ಕ್ರಮವನ್ನು ವಿರೋಧಿಸಿ, ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ, ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆ ತುಮಕೂರು ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ವಿರೋಧಿ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಬೇಕೆಂದು ಘೋಷಣೆ ಕೂಗಿದರಲ್ಲದೆ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಹಿಂದಿ ಹೇರಿಕೆಗೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಸರಕಾರದ ಕ್ರಮ ಸ್ವಾಗತಾರ್ಹವಾಗಿದ್ದು, ಸರಕಾರ ನಿರ್ಧಾರವನ್ನು ಪ್ರಶ್ನಿಸುವ ರಾಜ್ಯಪಾಲರ ನೀತಿ ದುರದೃಷ್ಟಕರ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಶಸ್ತ್ಯ ದೊರೆಯಬೇಕು. ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಅನ್ನದ ಭಾಷೆಯನ್ನಾಗಿಸಲು ಸರಕಾರ, ಹಿಂದಿ ಭಾಷೆಯ ಪರೀಕ್ಷೆಗೆ ಅಂಕಗಳ ಬದಲಾಗಿ, ಗ್ರೇಡ್ ನೀಡುವ ಪದ್ದತಿಯನ್ನು ಜಾರಿಗೆ ತಂದಿದೆ. ಹಿಂದಿಯನ್ನು ಒಂದು ಭಾಷೆಯಾಗಿ ಕಲಿಯಲು ಯಾರು ಅಡ್ಡಿ ಪಡಿಸುತ್ತಿಲ್ಲ. ಆದರೆ ಬಲವಂತವಾಗಿ ಹೇರುವುದಕ್ಕೆ ನಮ್ಮ ವಿರೋಧವಿದೆ. ಈ ನಿಟ್ಟಿನಲ್ಲಿ ಸರಕಾರದ ನಡೆ ಸ್ವಾಗತಾರ್ಹ. ಕಳೆದ ಐವತ್ತು ವರ್ಷಗಳಿಂದ ಕನ್ನಡಿಗರ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆದ ಗೋಕಾಕ್ ಚಳವಳಿಯನ್ನು ಮತ್ತೊಮ್ಮೆ ರಾಜ್ಯದ ಜನರಿಗೆ ನೆನಪು ಮಾಡಬೇಕಿದೆ. ಹಿಂದೊಮ್ಮೆ ಹಿಂದಿಯನ್ನು ಕರ್ನಾಟಕದ ಮೇಲೆ ಬಲವಂತವಾಗಿ ಹೇರಲು ಮುಂದಾದಾಗ ನಾಡಿನೆಲ್ಲಡೆ ಸಿನಿಮಾ ನಟರು, ಹೋರಾಟಗಾರರು ಎಲ್ಲರೂ ಸೇರಿ ಗೋಕಾಕ್ ಚಳವಳಿ ನಡೆಸಿದ್ದರು. ಈ ಮತ್ತೊಮ್ಮೆ ಆದೇ ರೀತಿಯ ಪ್ರತಿಭಟನೆ ಅಗತ್ಯವಿದೆ ಎಂಬ ಪರಿಸ್ಥಿತಿ ಉಂಟಾಗಿದೆ. ನೆರೆಯ ತಮಿಳುನಾಡು, ಮಹಾರಾಷ್ಟçಗಳಲ್ಲಿಯೂ ಹಿಂದಿ ಹೇರಿಕೆಯನ್ನು ವಿರೋಧಿಸಿ, ದ್ವಿಭಾಷಾ ನೀತಿಯನ್ನು ಜಾರಿಗೆ ತರಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ರಾಜ್ಯಪಾಲರು ಪದೇ ಪದೇ ಸರಕಾರದ ನೀತಿಗಳಲ್ಲಿ ಹಸ್ತಕ್ಷೇಪ ಮಾಡಿ, ಅದರಲ್ಲಿಯೂ ಕನ್ನಡ ಭಾಷೆಯ ವಿಚಾರದಲ್ಲಿ ಮೂಗು ತೂರಿಸುವ ಕೆಲಸ ಮಾಡಿರುವುದು ತರವಲ್ಲ. ರಾಜ್ಯಪಾಲರಿಗೆ ಹಿಂದಿ ಭಾಷೆಯ ಮೇಲೆ ಅಷ್ಟೊಂದು ಒಲವು ಇದ್ದರೆ ಉತ್ತರ ಭಾರತದ ರಾಜ್ಯಗಳಿಗೆ ಹೋಗಲಿ, ರಾಷ್ಟçಪತಿಗಳು ಕೂಡಲೇ ಕರ್ನಾಟಕದಿಂದ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರನ್ನು ವಾಪಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ಕರವೇ ಪ್ರಧಾನ ಕಾರ್ಯದರ್ಶಿ ಅಂಬರೀಷ್, ಉಪಾಧ್ಯಕ್ಷ ಆದೇಶ್, ರಾಜೇಶ್, ಮಹಿಳಾ ಪ್ರಧಾನ ಕಾರ್ಯದರ್ಶಿ ರಾಧಾಎಲ್.ಗೌಡ, ಕೊರಟಗೆರೆ ನಟರಾಜು, ಶಶಿಕುಮಾರ್, ಯುವಘಟಕದ ಪವನ್, ಅರುಣ್, ಚಿಕ್ಕನಾಯಕನಹಳ್ಳಿ ಮಾಲಾ, ಶಕುಂತಲ, ಹೇಮ, ರೇಖಾ, ಪಾವರ್ತಮ್ಮ ಇದ್ದರು.


