ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾನಿಧಿ ಕಾಲೇಜಿನ ವಾಣಿಜ್ಯ ವಿಭಾಗದ ಇಬ್ಬರು ವಿದ್ಯಾರ್ಥಿಗಳು 600ಕ್ಕೆ 597 ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾನಿಧಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರೋಹನ್ ಎಂ. 600 ಅಂಕಗಳಿಗೆ 597 (ಶೇ. 99.50) ಹಾಗೂ ಪೂರ್ವಿ ಪಿ. 600ಕ್ಕೆ 597 (ಶೇ. 99.50) ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ರಾಜ್ಯಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮತ್ತೋರ್ವ ನಂದಶ್ರೀ ಎಸ್. ಸಹ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ( ಶೇ. 99.33) ಫಲಿತಾಂಶ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹಾಗೆಯೇ ಕಾಲೇಜಿನ ಸುಮಾರು 20ಕ್ಕೂ ಅಧಿಕ ವಿದ್ಯಾರ್ಥಿಗಳು 600ಕ್ಕೆ 590ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಕಾಲೇಜಿನ ಕಾರ್ಯದರ್ಶಿ ಪ್ರದೀಪ್ಕುಮಾರ್ , ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುವುದು ಬಹಳ ಹೆಮ್ಮೆಯ ಸಂಗತಿ ಎಂದರು.
ವಿದ್ಯಾರ್ಥಿಗಳಾದ ಪೂರ್ವಿ ಪಿ., ರೋಹನ್ ಎಂ. ಹಾಗೂ ನಂದಶ್ರೀ ಅವರು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗೈದಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಉಪನ್ಯಾಸಕರ ಗುಣಮಟ್ಟದ ಬೋಧನೆ, ಕಾಲೇಜಿನ ಪರಿಸರ ಹಾಗೂ ಪೋಷಕರ ಸಹಕಾರದ ಜತೆದೆ ವಿದ್ಯಾರ್ಥಿಗಳ ಪರಿಶ್ರಮದ ಅಧ್ಯಯನವೇ ಕಾರಣ ಎಂದರು.
ಇದೇ ಸಂದರ್ಭದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಪುಷ್ಪಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಸಿದ್ದೇಶ್ವರಸ್ವಾಮಿ, ಸುಬ್ರಹ್ಮಣ್ಯ, ಉಪಪ್ರಾಂಶುಪಾಲ ವೇದಮೂರ್ತಿ ಇದ್ದರು.


