Saturday, April 18, 2026
Google search engine
Homeಮುಖಪುಟಕೃತಕ ಬುದ್ದಿಮತ್ತೆ ನ್ಯಾಯಾಂಗದ ಪ್ರವೇಶವಾಗಿದೆ-ಸಿದ್ದರಾಮಯ್ಯ

ಕೃತಕ ಬುದ್ದಿಮತ್ತೆ ನ್ಯಾಯಾಂಗದ ಪ್ರವೇಶವಾಗಿದೆ-ಸಿದ್ದರಾಮಯ್ಯ

ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತ ಸಂಸ್ಥೆಗಳು ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು ಎಂಬ ವಿಷಯದ ಕುರಿತ ಈ ಸಮ್ಮೇಳನವು ಬಹಳ ಮಹತ್ವದ್ದಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿ, ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ ಎಂದರು.

ನಾವು ಸಾಕ್ಷಿಗಳನ್ನು ಹೇಗೆ ಅರ್ಥೈಸಿಕೊಳ್ಳುತ್ತೇವೆ, ಸತ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಮತ್ತು ನಿರ್ಧಾರಗಳನ್ನು ಹೇಗೆ ತಲುಪುತ್ತೇವೆ ಎಂಬುದನ್ನು ಪ್ರಶ್ನಿಸುವ ಪರಿವರ್ತನಾ ಶಕ್ತಿಯಾಗಿ ಕೃತಕ ಬುದ್ಧಿಮತ್ತೆ ಹೊರಹೊಮ್ಮುತ್ತಿದೆ. ಕೃತಕ ಬುದ್ಧಿಮತ್ತೆಯ ಸಹಾಯದಿಂದ ತ್ವರಿತ ಕಾನೂನು ಸಂಶೋಧನೆ, ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸುಧಾರಿತ ನಿರ್ವಹಣೆ ವ್ಯವಸ್ಥೆಗಳ ಮೂಲಕ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಆದರೂ, ಇದೇ ಸಮಯದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಳ್ಳುವುದರ ಕುರಿತು ಆಳವಾದ ಕಳವಳಗಳು ಮೂಡದೇ ಇರಲಾರದು ಎಂದು ಹೇಳಿದರು.

ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು ಅಲ್ಲಗಳೆಯುವಂತಿಲ್ಲ. ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ತಿಳಿಸಿದರು.

ನ್ಯಾಯಾಧೀಶರ ಅಧಿಕಾರವನ್ನು ಎಂದಿಗೂ ಅಲ್ಗಾರಿದಮ್‌ನ ಅಧಿಕಾರವು ಮರೆಮಾಚಬಾರದು. ಸಾಂವಿಧಾನಿಕ ನೈತಿಕತೆಯು ನೈಸರ್ಗಿಕ ಭಾವನೆಯಲ್ಲ, ಅದನ್ನು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ನಮಗೆ ನೆನಪಿಸಿದ್ದರು. ಸಾಂವಿಧಾನಿಕ ಮೌಲ್ಯಗಳು ತಾಂತ್ರಿಕ ಅಳವಡಿಕೆಗೆ ಮಾರ್ಗದರ್ಶನ ನೀಡುತ್ತವೆಯೇ ಹೊರತು ಅದೇ ಪರ್ಯಾಯವಲ್ಲ ಎಂಬುದನ್ನು ಮನಗಾಣಬೇಕು. ಕೃತಕ ಬುದ್ಧಿಮತ್ತೆಯ ಸಾಕ್ಷಿ, ಪುರಾವೆಗಳು ನಮ್ಮ ಕಾನೂನು ವ್ಯವಸ್ಥೆಗೆ ಹೊಸ ಸವಾಲುಗಳನ್ನು ಒಡ್ಡುತ್ತಿವೆ. ಡೀಪ್‌ಫೇಕ್‌ಗಳು, ಸಂಶ್ಲೇಷಿತ ಡೇಟಾ, ಪುರಾವೆಗಳ ದೃಢೀಕರಣ ಸವಾಲಾಗಿ ಪರಿಣಮಿಸಿದೆ ಎಂದಿದ್ದಾರೆ.

ಡಿಜಿಟಲ್ ಯುಗದಲ್ಲಿ ವಿಶ್ವಾಸಾರ್ಹ ಸಾಕ್ಷಿಗಳು ಯಾವುವು ಎಂಬುದನ್ನು ನಿರ್ಧರಿಸಲು ನ್ಯಾಯಾಲಯಗಳ ಅಗತ್ಯ ಹೆಚ್ಚುತ್ತಿದೆ. ಹಾಗೆ ಮಾಡುವಾಗ, ಸತ್ಯವು ಕೇವಲ ತಾಂತ್ರಿಕ ಅತ್ಯಾಧುನಿಕತೆಯಲ್ಲಿ ಅಲ್ಲ, ಪರಿಶೀಲನೆ ಮತ್ತು ಸಮಗ್ರತೆಯ ಮೇಲೆ ಆಧಾರಿತವಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಸರಿಯಾದ ಪ್ರಕ್ರಿಯೆ, ಅನುಪಾತ ಮತ್ತು ಗೌಪ್ಯತೆಯ ಹಕ್ಕಿನ ಸಂರಕ್ಷಣೆಯಂತಹ ಸುಸ್ಥಾಪಿತ ಸಾಂವಿಧಾನಿಕ ಸಿದ್ಧಾಂತಗಳ ಮೂಲಕ ಕೃತಕ ಬುದ್ಧಿಮತ್ತೆಯ ಪರಿಧಿಯನ್ನು ನಿರ್ಧರಿಸಬೇಕಿದೆ. ನ್ಯಾಯಾಂಗವು ತಂತ್ರಜ್ಞಾನದ ಬಳಕೆದಾರ ಮಾತ್ರವಲ್ಲದೆ ಸಮಾಜದಲ್ಲಿ ಅದರ ನಿಯೋಜನೆಗೆ ಮಾರ್ಗದರ್ಶನ ನೀಡುವ ನೈತಿಕ ದಿಕ್ಸೂಚಿಯೂ ಆಗಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular