ಮಹಿಳಾ ಮೀಸಲಾತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರುದ್ಧ ಜೆಡಿಎಸ್ ಮುಖಂಡರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು. ಟೌನ್ ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿ ಖಂಡಿಸಿದರು.
ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಹೆಚ್. ನಿಂಗಪ್ಪ ಮಾತನಾಡಿ, ಮಹಿಳೆಯರು ರಾಜಕೀಯ ಅಧಿಕಾರ ಪಡೆಯುವುದು ಕಾಂಗ್ರೆಸ್ನವರಿಗೆ ಬೇಕಾಗಿಲ್ಲ, ಅವರನ್ನು ಕೇವಲ ಮತ ನೀಡುವುದಕ್ಕಷ್ಟೇ ಸೀಮಿತ ಮಾಡಿಕೊಂಡಿವೆ ಎಂದು ಟೀಕಿಸಿದರು. ಮಹಿಳೆಯರಿಗೆ ಸಮಾನ ಅವಕಾಶ ದೊರೆಯಬೇಕು ಎಂದು ಬಸವಣ್ಣನವರು ಆಗಲೇ ಪ್ರತಿಪಾದಿಸಿದ್ದರು, ಡಾ.ಬಿ.ಆರ್. ಅಂಬೇಡ್ಕರ್ ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶ ಸಿಗಬೇಕು ಎಂದು ಸಂವಿಧಾನದಲ್ಲಿ ತಿಳಿಸಿದ್ದಾರೆ. ಮಹಿಳೆಯರನ್ನು ರಾಜಕೀಯ ಅಧಿಕಾರದಿಂದ ದೂರವಿಟ್ಟು ಕಾಂಗ್ರೆಸ್ ನಾಯಕರು ಸಂವಿಧಾನ ವಿರೋಧಿಗಳಾಗಿದ್ದಾರೆ. ದೇಶದಲ್ಲಿ 70 ಕೋಟಿಗೂ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳೆಯರಿಗೆ ಅಧಿಕಾರ ಸಿಗಬೇಕಾಗಿರುವುದು ಸಾಮಾಜಿಕ ನ್ಯಾಯ. ಮಹಿಳೆಯರನ್ನು ಕಾಂಗ್ರೆಸ್ ಪಕ್ಷ ಇಷ್ಟೊಂದು ಹೀನಾಯವಾಗಿ ಕಾಣುತ್ತಿರುವುದು ದೇಶದ ಮಹಿಳೆಯರಿಗೆ ಮಾಡಿದ ದ್ರೋಹ ಎಂದು ಟೀಕಿಸಿದರು.
ತುರುವೇಕರೆ ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ಮಹಿಳೆಯರ ಮತ ಬೇಕು, ಅವರಿಗೆ ಅಧಿಕಾರ ಕೊಡುವುದು ಬೇಕಾಗಿಲ್ಲ, ಗ್ಯಾರಂಟಿಗಳ ಆಮಿಷವೊಡ್ಡಿ ಅವರ ಮತ ಪಡೆಯಬಹುದು ಎಂಬ ಹುಂಬುತನ ಕಾಂಗ್ರೆಸ್ ನಾಯಕರಿಗಿದೆ. ಈಗ ಮಹಿಳೆಯರು ಜಾಗೃತರಾಗಿದ್ದಾರೆ. ಕಾಂಗ್ರೆಸ್ ಮಹಿಳಾ ವಿರೋಧಿ ಧೋರಣೆಗಳು ಅರ್ಥವಾಗಿವೆ. ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಗ್ರಾಮ ಪಂಚಾಯ್ತಿ, ಜಿಲ್ಲಾ, ತಾಲ್ಲೂಕು ಪಂಚಾಯ್ತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ದೊರೆಯುವಂತೆ ಮಾಡಿದ್ದು ದೇವೇಗೌಡರು. ಮಹಿಳೆಯರು ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೂ ಅವಕಾಶ ಕಲ್ಪಿಸಬೇಕಾದದ್ದು ಸಾಮಾಜಿಕ ಸಮಾನತೆ. ದೇಶದ ಮಹಿಳೆಯರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಗ್ಗೆ ಕಠಿಣ ನಿಲುವು ಹೊಂದಬೇಕು ಎಂದು ಎಂ.ಟಿ. ಕೃಷ್ಣಪ್ಪ ಕರೆ ನೀಡಿದರು.
ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಮಾತನಾಡಿ, ಮಹಿಳೆಯರ ಬಗ್ಗೆ ಬಾಯಿಮಾತಿನಲ್ಲಿ ಕಾಳಜಿ ತೋರಿಸುವ ಕಾಂಗ್ರೆಸ್ ನಾಯಕರಿಗೆ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ, ಗೌರವವೂ ಇಲ್ಲ, ಮಹಿಳೆಯರಿಗೆ ರಾಜಕೀಯ ಅಧಿಕಾರ ಕೊಡಬೇಕೆಂಬ ಇಚ್ಛಾಶಕ್ತಿ ಕಾಂಗ್ರೆಸ್ನವರಿಗಿಲ್ಲ. ಇದರ ಫಲವನ್ನ ಅವರು ಅನುಭವಿಸುತ್ತಾರೆ ಎಂದು ಆರೋಪಿಸಿದರು.
ತಿಪಟೂರಿನ ಮುಖಂಡ ಕೆ.ಟಿ. ಶಾಂತಕುಮಾರ್ ಮಾತನಾಡಿದರು. ಮುಖಂಡರಾದ ಗುಬ್ಬಿ ನಾಗರಾಜು, ಕೊರಟಗೆರೆ ಅಧ್ಯಕ್ಷ ಕಾಮರಾಜು, ನಗರಪಾಲಿಕೆ ಮಾಜಿ ಉಪಮೇಯರ್ ಟಿ.ಆರ್. ನಾಗರಾಜು, ನಗರಸಭೆ ಮಾಜಿ ಅಧ್ಯಕ್ಷ ಟಿ.ಹೆಚ್. ಜಯರಾಮ್, ಮಾಜಿ ಉಪಾಧ್ಯಕ್ಷ ಶ್ರೀನಿವಾಸ್ಪ್ರಸಾದ್, ಮಾಜಿ ಸದಸ್ಯರಾದ ಟಿ.ಜಿ.ನರಸಿಂಹರಾಜು, ಮೋಹನ್ಕುಮಾರ್, ಟಿ.ಎ.ಬಾಲಕೃಷ್ಣ ಭಾಗವಹಿಸಿದ್ದರು.


