ತುಮಕೂರು ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿ ಜಿಲ್ಲೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ ಎಂದು ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಆರಂಭವಾಗಿರುವ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ ಹಾಗೂ ಈಜುಕೊಳ ನಿರ್ಮಿಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ಮೇ 3ರಿಂದ ಅಂತಾರಾಷ್ಟ್ರೀಯ ಮಹಿಳಾ ಟೆನ್ನಿಸ್ ಕ್ರೀಡಾಕೂಟ ನಡೆಯುತ್ತದೆ ಎಂದು ಹೇಳಿದರು.
ಅಮೆರಿಕಾದಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ತುಮಕೂರಿನಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟ ಅತ್ಯಂತ ಮಹತ್ವ ಪಡೆದಿದೆ. ಅಮೆರಿಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಭಾರತದ ಪ್ರತಿನಿಧಿಗಳನ್ನು ಈ ಕ್ರೀಡಾಕೂಟದಲ್ಲಿ ಆಯ್ಕೆ ಮಾಡಲಾಗುತ್ತದೆ. ಇದೊಂದು ಮಹತ್ವದ ವಿಷಯವಾಗಿದೆ ಎಂದು ವಿವರಿಸಿದರು.
ತುಮಕೂರು ನಗರದಲ್ಲಿ ಈ ವಿಶೇಷ ಕ್ರೀಡಾ ವಾತಾವರಣ ನಿರ್ಮಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯುವ ಕ್ರೀಡಾಳುಗಳಿಗೆ ಅನುಕೂಲವಾಗಿದೆ. ಪ್ರತಿದಿನವೂ ಯುವ ಪ್ರತಿಭೆಗಳು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ, ಟೆನ್ನಿಸ್ ಕ್ರೀಡಾಂಗಣದಲ್ಲಿ ತರಬೇತಿ, ತಾಲೀಮು ನಡೆಸುತ್ತಿದ್ದಾರೆ. ಮುಂಬರುವ ಏಷ್ಯನ್ ಒಲಿಂಪಿಕ್ ಕ್ರೀಡಾಕೂಟಗಳನ್ನು ಪ್ರತಿನಿಧಿಸಲು ಕ್ರೀಡಾಪಟುಗಳು ಇಲ್ಲಿ ತಯಾರಾಗುತ್ತಿರುವುದು ಸಂತೋಷದ ವಿಷಯ ಎಂದರು.
ಶಾಸಕ ಬಿ. ಸುರೇಶ್ ಗೌಡ, ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿದರು. ಇದೇ ವೇಳೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿದ ಪ್ರಿಯಾ ಮೋಹನ್, ರೀತುಶ್ರೀ ಅವರ ಪೋಷಕರನ್ನು ಗೌರವಿಸಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ. ಅಶ್ವಿಜ, ಎಸ್ಪಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತೆ ಶುಭ ಬಿ., ರಾಜ್ಯ ಅಥ್ಲೆಟಿಕ್ ಸಂಸ್ಥೆ ಸ್ಪರ್ಧಾ ನಿರ್ದೇಶಕ ಸತ್ಯನಾರಾಯಣ್, ತುಮಕೂರು ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಪ್ರಭಾಕರ್ ಎ.ಎನ್. ಹಾಜರಿದ್ದರು.


