ಚುನಾವಣಾ ಆಯೋಗ ಪಶ್ಚಿಮಬಂಗಾಳದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ ನಡುವೆಯೇ ಬಿಜೆಪಿ ಶಾಸಕ ಸೌಮೆನ್ ರಾಯ್ ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದು ಬಿಜೆಪಿಗೆ ತೀವ್ರ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿ ಕಾಲಿಯಾಗಂಜ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಸೌಮೆನ್ ರಾಯ್ ಇದೀಗ ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದರು. ಟಿಎಂಸಿ ಮುಖಂಡರು ರಾಯ್ ಅವರನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಪಶ್ಚಿಮಬಂಗಾಳ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದು ನನ್ನ ಉದ್ದೇಶ. ಬಂಗಾಳ ಮತ್ತು ಉತ್ತರ ಬಂಗಾಳ ಅಭಿವೃದ್ಧಿಯೇ ನನ್ನ ಆದ್ಯತೆಯಾಗಿದ್ದು ಪಕ್ಷಕ್ಕೆ ಸೇರಲು ಕಾರಣ ಎಂದು ರಾಯ್ ಹೇಳಿದ್ದಾರೆ. ರಾಯ್ ಬಿಜೆಪಿ ತೊರೆದಿರುವುದರಿಂದ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಶಾಸಕರ ಸಂಖ್ಯೆ 71ಕ್ಕೆ ಇಳಿಕೆಯಾಗಿದೆ.
ಕಳೆದ ನಾಲ್ಕು ವಾರಗಳಲ್ಲಿ 4 ಮಂದಿ ಶಾಸಕರು ಬಿಜೆಪಿ ತೊರೆದಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಕ್ಷೇತ್ರವೂ ಸೇರಿದಂತೆ ಮೂರು ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದ್ದು ಸೆಪ್ಟೆಂಬರ್ 30ರಂದು ಮತದಾನ ನಡೆಯಲಿದೆ. ಅಕ್ಟೋಬರ್ 3ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಶಾಸಕ ರಾಯ್ ಟಿಎಂಸಿ ಸೇರುವ ಮೊದಲು ರಾಜ್ಯ ಸರ್ಕಾರದ ಬಗ್ಗೆ ಮೃದು ಧೋರಣೆ ಹೊಂದಿದ್ದರು. ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಟೀಕೆಗಳಿಂದ ಅಂತರ ಕಾಯ್ದುಕೊಂಡಿದ್ದರು ಎಂದು ಹೇಳಲಾಗಿದೆ.