Sunday, May 10, 2026
Google search engine
Homeಮುಖಪುಟ‘ಸಂವಿಧಾನ ಎಲ್ಲಾ ಜಾತಿ, ಧರ್ಮಗಳಿಗೂ ಸಮಾನ ಅವಕಾಶ ನೀಡಿದೆ’-ಶಾಸಕ ಎಚ್.ವಿ.ವೆಂಕಟೇಶ್ ಅಭಿಮತ

‘ಸಂವಿಧಾನ ಎಲ್ಲಾ ಜಾತಿ, ಧರ್ಮಗಳಿಗೂ ಸಮಾನ ಅವಕಾಶ ನೀಡಿದೆ’-ಶಾಸಕ ಎಚ್.ವಿ.ವೆಂಕಟೇಶ್ ಅಭಿಮತ

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕರ ಸಂಘ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಆಚರಿಸಲಾಯಿತು. ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪಾವಗಡದ ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕರೆಕ್ಯಾತನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 135ನೇ ಜನ್ಮ ದಿನವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹೆಚ್.ವಿ.ವೆಂಕಟೇಶ್, ಭಾರತದ ಸಂವಿಧಾನವು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಎಲ್ಲಾ ಜಾತಿ ಧರ್ಮಗಳಿಗೂ ಸಮಾನವಾದ ಅವಕಾಶವನ್ನು ನೀಡಿದೆ. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಜಾರಿ ಇರುವುದರಿಂದ ಕೆಳವರ್ಗದ ಬಹುತೇಕ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಮೆಡಿಕಲ್ ಹೀಗೆ ಹಲವಾರು ವಿಭಾಗಗಳಲ್ಲಿ ವಿದ್ಯೆಯನ್ನು ಪಡೆಯುವಂತಾಯಿತು ಎಂದರು.

ಕಳೆದ 30 ವರ್ಷಗಳಿಗೆ ಹೋಲಿಸಿದರೆ ಇಂದಿನ ಜನಜೀವನ ಎಲ್ಲಾ ಹಂತದಲ್ಲಿಯೂ ಸ್ವಲ್ಪ ಮಟ್ಟಿಗೆ ಸುಧಾರಣೆ ಕಂಡಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕು. ತಾಲೂಕಿನ ಯಾವುದೇ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ನೇರವಾಗಿ ಯಾವುದೇ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತರಬೇಕು. ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

ತುಮಕೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಕೊಟ್ಟ ಶಂಕರ್ ಮಾತನಾಡಿ, ದಲಿತರಿಗೆ ವಿಮೋಚನೆ ದಾರಿ ತೋರಿಸಿದವರೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್. ಬಹುದೊಡ್ಡ ಸಂವಿಧಾನವನ್ನು ದೇಶಕ್ಕೆ ನೀಡಿದ ದಲಿತರಿಗೆ ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಿಲ್ಲ. ಕೇವಲ ರಾಜಕೀಯವು ಕೆಲವು ವರ್ಗಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಹೇಳಿದರು.

ಎಸ್‌ಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, ಕೇಂದ್ರ ಸರ್ಕಾರ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಕಳೆದ ಹತ್ತು ವರ್ಷದಲ್ಲಿ ದೇಶದಲ್ಲಿ ದಲಿತರ ಮೇಲೆ ವ್ಯಾಪಕವಾದ ದಬ್ಬಾಳಿಕೆ ಮತ್ತು ದೌರ್ಜನ್ಯಗಳು ನಡೆದಿವೆ. ದಲಿತರ ಅಭಿವೃದ್ಧಿಗಾಗಿ ಇದುವರೆಗೂ ವಿಶೇಷವಾದ ಸಂಸತ್ ಅಧಿವೇಶನ ನಡೆದಿಲ್ಲ. ದಲಿತರನ್ನು ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಉಪಯೋಗಿಸಿಕೊಳ್ಳಲಾಗುತ್ತಿದೆ. ದೇಶದ ನೈಜ ಸಮಸ್ಯೆಗಳನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಒಂದು ದಿನವೂ ಸಹ ಮಾತನಾಡಿಲ್ಲ. ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಆವೇಶದಿಂದ ಮಾತನಾಡುತ್ತಾರೆ. ದಲಿತರ ರಕ್ಷಣೆಗಾಗಿ ಮತ್ತು ಸಂವಿಧಾನದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ ಎಂದು ದೂರಿದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ರಾಜಕೀಯವು ಯಾರಿಗೂ ಶಾಶ್ವತವಾದುದಲ್ಲ. ಎಲ್ಲರೂ ಸಮಾನವಾಗಿ ಬದುಕಬೇಕು ಮತ್ತು ನನ್ನ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂದೆಯೂ ಸಹ ಜನ ಆಶೀರ್ವಾದ ಮಾಡಿದರೆ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಂಚರಾಯ, ನಾಗರಾಜ, ಕಾರ್ಯದರ್ಶಿ ಸಿ. ಶಿವಣ್ಣ, ಅಧ್ಯಕ್ಷ ಕೆ.ಎಸ್.ಶಿವಕುಮಾರ್, ವಕೀಲ ಕೆ.ಒ.ಶಿವಣ್ಣ, ಗ್ರಾ.ಪಂ. ಮಾಜಿ ಸದಸ್ಯ ಸ್ವಾರಣ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುನಿತ, ಸಿ.ಕೆ.ತಿಪ್ಪೇಸ್ವಾಮಿ, ವೆಂಕಟರವಣಪ್ಪ, ಟಿ.ಹನುಮಂತರಾಯ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular