2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮೇ.19ರಂದು ನಡೆದ ಕರ್ನಾಟಕ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶದಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಹೀಗಾಗಿ 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಇದಕ್ಕೆ ಬಿಜೆಪಿ ಮುಖಂಡರು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದರೆ ರಾಜ್ಯ ದಿವಾಳಿಯಾಗಲಿದೆ ಎಂದು ಹೇಳಿದರು. ಆದರೆ ಗ್ಯಾರೆಂಟಿ ಯೋಜನೆಗಳು ಜಾರಿ ಮಾಡಿದೆವು. ಇದರಿಂದ ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅಗತ್ಯ ವಸ್ತುಗಳು, ಪೆಟ್ರೋಲ್, ಡಿಸೆಲ್ ಮತ್ತು ಸಿಲೆಂಡರ್ ಬೆಲೆ ಏರಿಕೆ ಆಗಿದೆ. ಇದನ್ನು ತಡೆಯಲು ಬಿಜೆಪಿ ಸರ್ಕಾರ ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಗುಜರಾತ್ ಮಾದರಿ ಎಂದು ಹೇಳಿದರು. ಆದರೆ ಗುಜರಾತ್ ಮಾದರಿ ಏನಾಯ್ತು ಎಂದು ಪ್ರಶ್ನಿಸಿದರು.
ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣಭೈರೇಗೌಡ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.


