ರಾಜ್ಯದ ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ಮಾದಿಗ ಸಮಾಜದ ಸರ್ವೋಚ್ಚ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಖಾತೆ ನೀಡಬೇಕು ಎಂದು ಕರ್ನಾಟಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಒತ್ತಾಯಿಸಿದರು.
ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅತಿ ಹೆಚ್ಚಿನ ಸಂಖ್ಯೆಯ ಮಾದಿಗ ಸಮುದಾಯದ ಹಿರಿಯ ಪ್ರಭಾವಿ ನಾಯಕ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೆ.ಎಚ್. ಮುನಿಯಪ್ಪನವರು ಈ ರಾಜ್ಯದ ಜನಾನುರಾಗಿ ಜನನಾಯಕರಾಗಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ, ಪ್ರಸ್ತುತ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾಗಿ ಸಮರ್ಥವಾಗಿ ಉತ್ತಮ ಆಡಳಿತ ನಿರ್ವಹಣೆ ಮಾಡಿ ಅಪಾರ ಅನುಭವ ಹೊಂದಿರುವ ದಕ್ಷ ಹಾಗೂ ಪ್ರಾಮಾಣಿಕ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದರು.
ಸುಮಾರು 5 ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಸರ್ಕಾರದ ಆಡಳಿತ, ಸಮುದಾಯದ ಜನರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯಪರ ವಿಚಾರದಲ್ಲಿ ಮುಂಚೂಣಿ ರಾಜಕೀಯ ಮುತ್ಸದ್ಧಿಯಾಗಿದ್ದಾರೆ. ಪ್ರಸ್ತುತ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ನೂತನವಾಗಿ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗುತ್ತಿದೆ. ಹೊಸ ಸರ್ಕಾರದಲ್ಲಿ ಕೆ.ಎಚ್.ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಲ್ಲದೆ ಪ್ರಮುಖ ಖಾತೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಈ ಹಿಂದೆ ಕಾಂಗ್ರೆಸೇತರ ಸರ್ಕಾರಗಳು ಮಾದಿಗ ಸಮುದಾಯದ ಜನ ಪ್ರತಿನಿಧಿಗಳಿಗೆ ಶಿಕ್ಷಣ, ಕಂದಾಯ, ಗೃಹ, ಸಮಾಜ ಕಲ್ಯಾಣ, ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳನ್ನು ನೀಡಿದವು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಮಾತ್ರ ಮಾದಿಗ ಜನಪ್ರತಿನಿಧಿಗಳಿಗೆ ಪ್ರಮುಖ ಖಾತೆ ನೀಡದೆ ಅನ್ಯಾಯ ಮಾಡಲಾಗಿದೆ. ಆದ್ದರಿಂದ ಕೆ.ಎಚ್.ಮುನಿಯಪ್ಪ ಅವರಿಗೆ ಹಾಗೂ ಅವರ ಜೊತೆ ಮತ್ತಿಬ್ಬರು ಮಾದಿಗ ಸಮುದಾಯದ ಶಾಸಕರುಗಳಿಗೆ ಮಂತ್ರಿ ಸ್ಥಾನ ನೀಡಬೇಕು. ವಿಧಾನ ಪರಿಷತ್ನಲ್ಲಿ ಖಾಲಿ ಇರುವ ಎಂಎಲ್ಸಿ ಸ್ಥಾನ ಹಾಗೂ ರಾಜ್ಯಸಭೆಯಲ್ಲಿ ಖಾಲಿ ಇರುವ ರಾಜ್ಯಸಭಾ ಸ್ಥಾನಗಳನ್ನು ಮಾದಿಗ ಸಮುದಾಯಕ್ಕೆ ನೀಡಿ ನ್ಯಾಯ ಒದಗಿಸಬೇಕಾಗಿದೆ ಎಂದು ಆಗ್ರಹಿಸಿದರು.
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ಉತ್ತಮ ಸ್ಥಾನಮಾನ ನೀಡಲಿಲ್ಲ, ನಗರದ ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಶಾಸಕ ಗಂಗಹನುಮಯ್ಯ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಕೆಂಚಮಾರಯ್ಯ, ನಗರಸಭೆ ಮಾಜಿ ಸದಸ್ಯ ನರಸಿಯಪ್ಪ ಅವರಿಗೆ ಎಂಎಲ್ಸಿ ಅಥವಾ ಯಾವುದಾದರೂ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಕೆಂಚಮಾರಯ್ಯ ಮಾತನಾಡಿ, ಕಾಂಗ್ರೆಸ್ ಮಾತ್ರವಲ್ಲ ಇದುವರೆಗಿನ ಎಲ್ಲಾ ಸರ್ಕಾರಗಳೂ ಒಳಮೀಸಲಾತಿ ವಿಚಾರದಲ್ಲಿ ನಮಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ. ಒಗ್ಗಟ್ಟಿನ ಕೊರತೆಯಿಂದ ಸರ್ಕಾರಗಳು ನಮ್ಮನ್ನು ನಿರ್ಲಕ್ಷ್ಯ ಮಾಡಿವೆ, ಇನ್ನು ಮುಂದೆ ಮಾದಿಗ ಸಮುದಾಯ ಒಗ್ಗಟ್ಟು ಪ್ರದರ್ಶಿಸಿದರೆ ಸಿಗಬೇಕಾದ ಸ್ಥಾನಮಾನಗಳು ನಮಗೆ ಸಿಗುತ್ತವೆ ಎಂದರು.
ಮುಖಂಡ ವೈ.ಕೆ. ಬಾಲಕೃಷ್ಣಪ್ಪ ಮಾತನಾಡಿ, ಸಂವಿಧಾನ ರಕ್ಷಣೆ ಮಾಡುತ್ತೇವೆ, ಸಾಮಾಜಿಕ ನ್ಯಾಯ ಒದಗಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ನಾಯಕರು, ಬಹು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯದ ನಾಯಕರಿಗೆ ಸೂಕ್ತ ಹುದ್ದೆ ನೀಡಬೇಕು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಾವು ಗೌರವಿಸುತ್ತೇವೆ, ಅವರಾದರೂ ಮಾದಿಗರಿಗೆ ಸ್ಥಾನಮಾನ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು.
ಮುಖಂಡ ಪಾವಗಡ ಶ್ರೀರಾಮ್, ನಗರಸಭೆ ಮಾಜಿ ಸದಸ್ಯ ನರಸಿಯಪ್ಪ, ಮಹಾಸಭಾ ಕಾರ್ಯದರ್ಶಿ ಕೊಟ್ಟ ಶಂಕರ್, ತಾಲೂಕು ಅಧ್ಯಕ್ಷ ಹೊಳಕಲ್ಲು ಆಂಜನಪ್ಪ, ವಿಭೂತಿ ಸಿದ್ಧಪ್ಪ, ಮುಖಂಡರಾದ ಡಾ.ಮುಕುಂದ, ಸಿ.ಗಂಗರಾಜು, ಗೂಳರಿವೆ ನಾಗರಾಜ್, ರಂಗಧಾಮಯ್ಯ, ಕವಣದಾಳ ಶಿವಣ್ಣ, ಮಂಜುನಾಥ್, ಮಹದೇವ್, ಬಿ.ಜಿ. ಸಾಗರ್ ಇದ್ದರು.


