ಸಾರ್ವಜನಿಕ ಉದ್ಯಮವಾದ ಕರ್ನಾಟಕ ವಿದ್ಯುತ್ ವಿತರಣಾ ಸಂಸ್ಥೆಯಾದ ಕೆಪಿಟಿಸಿಎಲ್ ಮತ್ತು ಬೆಸ್ಕಾಂ, ಎಸ್ಕಾಂಗೆ ಸಂಬಂಧಿಸಿದ ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ ಕಂಪೆನಿಗೆ ನೀಡಬಾರದು ಎಂದು ಆಗ್ರಹಿಸಿ ತುಮಕೂರು ನಗರದ ಕೋತಿತೋಪಿನಲ್ಲಿರುವ ಬೆಸ್ಕಾಂ ಕಚೇರಿ ಮುಂಭಾಗ ಅಧಿಕಾರಿಗಳು ಮತ್ತು ನೌಕರರು ಪ್ರತಿಭಟನೆ ನಡೆಸಿದರು.
ಬೆಸ್ಕಾಂ ಕಚೇರಿ ಮುಂಭಾಗ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಹಾಗೂ ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಜಮಾಯಿಸಿ ಕೆಪಿಟಿಸಿಎಲ್ ಮತ್ತು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳನ್ನು ಉಳಿಸಿ-ನಮ್ಮ ಹಕ್ಕನ್ನು ರಕ್ಷಿಸಿ ಎಂಬ ಕರಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ, ಸರ್ಕಾರಿ ಸ್ವಾಮ್ಯದ ಬೆಸ್ಕಾಂ ಇಲಾಖೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಆತಂಕ ಮೂಡಿಸಿದೆ. ಖಾಸಗಿ ಕಂಪೆನಿಯಾದ ಟಾಟಾ ಪವರ್ ಕಂಪೆನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಗ್ರಾಹಕರು, ರೈತರಿಗೆ ತುಂಬಾ ತೊಂದರೆಯಾಗಲಿದೆ. ಜತೆಗೆ ನೌಕರರ ಸೇವಾ ಭದ್ರತೆಗೂ ಧಕ್ಕೆ ಉಂಟಾಗಲಿದೆ ಎಂದರು.
ಗ್ರಾಹಕರೇ ನಮ್ಮ ದೇವರು. ಗ್ರಾಹಕರಿಗೆ ಸೇವೆ ಸಲ್ಲಿಸುವುದು ನಮ್ಮ ಮುಖ್ಯ ಕರ್ತವ್ಯ ಎಂದ ಅವರು, ಈ ಹಿಂದೆ ವಿದ್ಯುತ್ ಉತ್ಪಾದನೆ ಮಾಡಲು ಹಾಗೂ ಬೆಟ್ಟಗುಡ್ಡಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಯಾವ ಖಾಸಗಿ ಕಂಪೆನಿಗಳು ಮುಂದೆ ಬಂದಿರಲಿಲ್ಲ. ಆ ಕೆಲಸವನ್ನು ನಮ್ಮ ಇಲಾಖೆಯೇ ಮಾಡಿತು. ಆದರೂ ಸಹ ಈಗ ಖಾಸಗೀಕರಣ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಖಾಸಗಿ ಕಂಪೆನಿಯಾದ ಟಾಟಾ ಪವರ್ ಹಾಗೂ ರಿಲೆಯನ್ಸ್ ಈಗಾಗಲೇ ಬಾಂಬೆಯಲ್ಲಿ 10-12 ವರ್ಷದಲ್ಲಿ ಕೆಲಸ ಮಾಡುತ್ತಿವೆ. ಬಾಂಬೆ ಶ್ರೀಮಂತ ನಗರಿಯಾಗಿದೆ. ನಮ್ಮ ರಾಜ್ಯದಲ್ಲಿ ಮಧ್ಯಮ ವರ್ಗದವರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮಲ್ಲಿ 350 ಯೂನಿಟ್ಗೆ 2500 ದಿಂದ 3 ಸಾವಿರ ಬಿಲ್ ಬಂದರೆ ಬಾಂಬೆಯಲ್ಲಿ 7 ರಿಂದ 8 ಸಾವಿರ ರೂ. ಬಿಲ್ ಬರುತ್ತದೆ. ಪರಿಸ್ಥಿತಿ ಹೀಗಾದರೆ ನಾವು ಏನು ಮಾಡಬೇಕು ಎಂದು ಪ್ರಶ್ನಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆಯಡಿ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ನೀಡಿದೆ. ಯಾವುದೇ ಆದಾಯ ಇಲ್ಲದಿದ್ದರೆ ನಮ್ಮ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಕೆಪಿಟಿಎಲ್ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಮಾತನಾಡಿ, ವಿದ್ಯುತ್ ಕಂಪನಿ ಖಾಸಗೀಕರಣಗೊಂಡರೆ ಉದ್ಯೋಗ ಭದ್ರತೆ ಇಲ್ಲದಂತಾಗಿ ನೌಕರರು ಹಾಗೂ ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ. ಖಾಸಗಿ ಕಂಪೆನಿಗಳು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿ, ಕೆಲಸಕ್ಕೆ ತಕ್ಕಷ್ಟು ಮಾತ್ರ ಸಂಬಳ ನೀಡುವುದರಿಂದ ನೌಕರರು ಹಲವಾರು ಸಮಸ್ಯೆಗಳಿಗೆ ಗುರಿಯಾಗುತ್ತಾರೆ ಎಂದರು.
ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮಾತನಾಡಿ, ವಿದ್ಯುತ್ ವಿತರಣಾ ಪರವಾನಗಿಯನ್ನು ಟಾಟಾ ಪವರ್ನಲ್ಲಿ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಟಾಟಾ ಪವರ್ ಕಂಪೆನಿಯರು ನಮ್ಮ ನೌಕರರಿಗೆ ಕೆಲಸ ಕೊಡದೆ ಅನಿವಾರ್ಯವಾಗಿ ಸ್ವಯಂ ನಿವೃತ್ತಿ ಪಡೆದುಕೊಳ್ಳುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಾರೆ. ಹಾಗಾಗಿ ನೌಕರರು, ನೌಕರ ಸಂಬAಧಿತ ಸಂಘಗಳು, ಒಕ್ಕೂಟಗಳು ಜತೆಗೂಡಿ ಖಾಸಗೀಕರಣ ವಿರೋಧಿಸಿ ಉಗ್ರ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಪ್ರತಿಭಟನೆ ಬಳಿಕ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ನೌಕರರು ಎಂದಿನAತೆ ಕರ್ತವ್ಯಕ್ಕೆ ಹಾಜರಾದರು. ಪ್ರತಿಭಟನೆಯಲ್ಲಿ ಬೆಸ್ಕಾಂನ ಅಧಿಕಾರಿಗಳಾದ ಪ್ರಕಾಶ್ ಎಂ.ವಿ., ಜಗದೀಶ್ ಜಿ., ಸೋಮಶೇಖರಗೌಡ, ಪುರುಷೋತ್ತಮ್, ಹೆಚ್. ತಿಮ್ಮಪ್ಪ, ಎಂ.ಹೆಚ್. ವೆಂಕಟರಮಣಯ್ಯ ನೂರಾರು ಮಂದಿ ನೌಕರರು ಪಾಲ್ಗೊಂಡಿದ್ದರು.


