ಸಾಮಾಜಿಕ ಹೋರಾಟಗಾರ ಮತ್ತು ವಿಜ್ಞಾನಿ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ರಾಜ್ಯಾಧ್ಯಕ್ಷ ಅಂಬ್ಲಿಗಲ್ ಎನ್.ಶಿವಪ್ಪ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಮುಖ ಆರೋಪಿಯಾಗಿದ್ದಾರೆ. ಇತರೆ ಬಿಜೆಪಿ ಶಾಸಕರು ಸಹ ಒಂದು ಪ್ರಶ್ನೆಪತ್ರಿಕೆಯನ್ನು 50 ಲಕ್ಷಕ್ಕೆ ಮಾರಿಕೊಂಡಿದ್ದಾರೆ. ಇದು ಸಿಬಿಐ ತನಿಖೆಯಿಂದ ದೇಶವ್ಯಾಪಿ ಚರ್ಚೆಗೆ ಒಳಗಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಈ ವಿಚಾರವಾಗಿ ಮೌನ ವಹಿಸಿದ್ದಾರೆ. ಇದರಿಂದ ದೇಶದಲ್ಲಿ 25ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಭಾರತದ ಶ್ರೇಷ್ಟ ವಿಜ್ಞಾನಿ ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 20 ದಿನ ಕಳೆದಿದ್ದರೂ ಕೇಂದ್ರ ಶಿಕ್ಷಣ ಸಚಿವರಾಗಲಿ, ಪ್ರಧಾನಿಯಾಗಲಿ ಮಾತುಕತೆ ನಡೆಸುವ ಪ್ರಯತ್ನ ಮಾಡಿಲ್ಲ. ಆದ್ದರಿಂದ ದೇಶದಲ್ಲಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಇದನ್ನು ಬೆಂಬಲಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಅಧ್ಯಕ್ಷ ಆದರ್ಶ ಎಂ.ಜೆ. ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಐಶೆ ಘೋಷ್ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲೂ ಭಾರತ ವಿದ್ಯಾರ್ಥಿ ಫೆಡರೇಷನ್ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಉಂಟಾಗಿರುವ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಮಿತಿ ಮೀರಿದ್ದು ಇದಕ್ಕೆ ಕೇಂದ್ರ ಸರ್ಕಾರ ಬೆಲೆ ತೆರಬೇಕಾಗುತ್ತದೆ. ಒಂದು ವೇಳೆ ವಿಜ್ಞಾನಿ ಸೋನಂ ವಾಂಗ್ಚುಕ್ ಉಪವಾಸದಿಂದ ಮೃತಪಟ್ಟರೆ ಕೇಂದ್ರ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ. ಈಗಾಗಲೇ ಅಂತಾರಾಷ್ಟ್ರಿಯ ಮಟ್ಟದಲ್ಲಿ ವ್ಯಾಪಕ ಪ್ರತಿಭಟನೆಗಳು, ಟೀಕೆಗಳು ದೊಡ್ಡ ಮಟ್ಟದಲ್ಲಿ ವ್ಯಕ್ತವಾಗುತ್ತಿವೆ ಎಂದು ಹೇಳಿದರು.
ಎಸ್ಎಫ್ಐ ಮಾಜಿ ತುಮಕೂರು ಜಿಲ್ಲಾಧ್ಯಕ್ಷ ಈ.ಶಿವಣ್ಣ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿ, ದೇಶದಲ್ಲಿ ದಿನದಿಂದ ದಿನಕ್ಕೆ ಶಿಕ್ಷಣ ಕ್ಷೇತ್ರದಲ್ಲಿನ ವ್ಯಾಪಕ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರ ಶಿಕ್ಷಣ ಸುಧಾರಣೆಗೆ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಇದುವರೆಗೂ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿಲ್ಲ. ಭಾರತದ ವಿಜ್ಞಾನಿ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ ಸೇರಿದಂತೆ ರೈತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಕೇಂದ್ರ ಸರ್ಕಾರ ದೇಶದಲ್ಲಿ ಇಷ್ಟೆಲ್ಲಾ ಪ್ರತಿಭಟನೆ ನಡೆಯುತ್ತಿದ್ದರೂ ಮೌನವಾಗಿದೆ. ಪ್ರಧಾನಿಗಳು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಿರುವುದು ಇದರಿಂದ ಕಂಡು ಬರುತ್ತದೆ. ಹೀಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಎಸ್ಎಫ್ಐ ಜಿಲ್ಲಾ ಪ್ರಧಾನ ಸಂಚಾಲಕರಾದ ಪ್ರಮೋದ್ ಆರ್, ಐಶ್ವರ್ಯ ಎ, ಮಲ್ಲೇಶ್ ಸಂಚಾಲಕರಾದ ಮದನ್, ತೀರ್ಥಪ್ರಸಾದ್ ಕೆ.ಆರ್.ಚಂದನ ಎಚ್.ಆರ್., ಸಂಜಯ್ಯ ಎಚ್.ಎಲ್, ಲೋಹಿತ್ ಎಂ,, ಸೈಯದ್ ಮುಜಾಯಿದ್, ಜೀವನ್, ಶರತ್, ಗಾಯತ್ರಿ, ಯಶೋಧ, ನಂದಿನಿ, ದಿವ್ಯಮಣಿ ಎಚ್.ಎಲ್., ಮುಸ್ಕಾನ್ ಭಾಗವಹಿಸಿದ್ದರು.


