ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಉತ್ತರ ಪ್ರದೇಶದ ಮುಝಫರ್ ನಗರದಲ್ಲಿ ಆಯೋಜಿಸಿದ್ದ ಕಿಸಾನ್ ಮಹಾಪಂಚಾಯತ್ ನಲ್ಲಿ ಭಾರೀ ರೈತಸ್ತೋಮ ಸೇರಿದೆ. ಸರ್ಕಾರಿ ಇಂಟರ್ ಕಾಲೇಜು ಆವರಣದಲ್ಲಿ ಸೇರಿರುವ ರೈತ ಸಮುದಾಯ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ.
ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕಿಸಾನ್ ಮಹಾಪಂಚಾಯತ್ ಮೂಲಕ ಆಡಳಿತಾರೂಢ ಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಉತ್ತರ ಪ್ರದೇಶ, ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಇತರೆ ಭಾಗಗಳಿಂದಲೂ ರೈತರು ಮಹಾಪಂಚಾಯತ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಭಾರತ ಕಿಸಾನ್ ಒಕ್ಕೂಟದ ಮಾಧ್ಯಮ ವಕ್ತಾರ ಧರ್ಮೇಂದ್ರ ಮಲ್ಲಿಕ್ ತಿಳಿಸಿದ್ದಾರೆ.
ವಿವಿಧ ಸಂಘಟನೆಗಳ ಸಾವಿರಾರು ಮಂದಿ ರೈತರು ಬಾವುಗಳನ್ನು ಹಿಡಿದು, ಬಗೆಬಗೆಯ ಟೋಪಿಗಳನ್ನು ಧರಿಸಿಕೊಂಡು ಬಸ್ಸುಗಳು, ಕಾರುಗಳು ಮತ್ತು ಟ್ರ್ಯಾಕ್ಟರ್ ಗಳ ಮೂಲಕ ಸಮಾರಂಭದ ಸ್ಥಳಕ್ಕೆ ಆಗಮಿಸುತ್ತಿದ್ದ ದೃಶ್ಯ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳ ಸೇರಿದಂತೆ ಕಂಡುಬಂತು.
ರ್ಯಾಲಿಯಲ್ಲಿ ಭಾಗವಹಿಸಿದ ರೈತರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳು ಮೊಳಗಿದವು. ಕೃಷಿ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಚಳವಳಿ ನಿಲ್ಲುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದರು.
ಮಹಾ ಪಂಚಾಯತ್ ನಲ್ಲಿ ಪಾಲ್ಗೊಂಡಿರುವ ರೈತರಿಗೆ ಮೊಬೈಲ್ ವ್ಯಾನ್ ಸೇರಿದಂತೆ 5 ಸಾವಿರ ಊಟದ ಲಂಗರ್ ಗಳನ್ನು ಸ್ಥಾಪಿಸಿದ್ದು ಎಲ್ಲರ ಹಸಿವನ್ನೂ ನೀಗಿಸಲಾಗುತ್ತಿದೆ. ಆರೋಗ್ಯ ಕ್ಯಾಂಪ್ ಗಳನ್ನು ಸ್ಥಾಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ರಾಷ್ಟ್ರೀಯ ಲೋಕ ದಳ ಮುಖ್ಯಸ್ಥ ಜಯಂತ್ ಚೌದರಿ, ಕಿಸಾನ್ ಮಹಾಪಂಚಾಯತ್ ನಲ್ಲಿ ಭಾಗಿಯಾಗಿರುವ ರೈತರ ಮೇಲೆ ಹೆಲಿಕಾಪ್ಟರ್ ನಲ್ಲಿ ಹೂಮಳೆ ಸುರಿಸಲು ಅವಕಾಶ ನೀಡಬೇಕೆಂಬ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿಲ್ಲ. ಭದ್ರತಾ ಕಾರಣಗಳಿಗಾಗಿ ಹೂಮಳೆ ಸುರಿಸಲು ಅವಕಾಶ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡಿರುವ ಮಹಾಪಂಚಾಯತ್ ಗೆ 15 ರಾಜ್ಯದ ರೈತರು ಜಾತಿ, ಧರ್ಮ, ರಾಜ್ಯ, ವರ್ಗರಹಿತವಾಗಿ ಎಲ್ಲರೂ ಬೆಂಬಲ ನೀಡಿದ್ದಾರೆ. ರೈತರು, ರೈತ ಕೂಲಿಕಾರರು, ರೈತ ಚಳವಳಿಯ ಶಕ್ತಿ ಏನೆಂಬುದನ್ನು ತೋರಿಸಲು ಮಹಾಪಂಚಾಯತ್ ಏರ್ಪಡಿಸಿದೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 8ರೊಳಗೆ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು. ಇಲ್ಲದಿದ್ದರೆ ರೈತರ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.