ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27ರಂದು ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಿದೆ. ಮುಝಫರ್ ನಗರದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ ನಲ್ಲಿ ಈ ತೀರ್ಮಾನ ಕೈಗೊಂಡಿದ್ದು ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಸೇರಿದಂತೆ ಬಿಜೆಪಿಯೇತರ ಎಲ್ಲಾ ಪಕ್ಷಗಳು ಬೆಂಬಲ ನೀಡಿವೆ.
ಭಾರತ್ ಕಿಸಾನ್ ಯೂನಿಯನ್ ಅಧ್ಯಕ್ಷ ಟಿಕಾಯತ್ ಈ ನಿರ್ಣಯವನ್ನು ಸಭೆಯಲ್ಲಿ ಓದಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು. ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎಂದು ಕೋರಿದ್ದಾರೆ.
ಈಗಾಗಲೇ ಕಾಂಗ್ರೆಸ್, ಎಡಪಕ್ಷಗಳು ಮತ್ತು ಇತರೆ ಸಂಘಸಂಸ್ಥೆಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ನೂತನವಾಗಿ ರಚನೆಯಾಗಿರುವ ಕಾಂಗ್ರೆಸ್ ಪ್ರತಿಭಟನಾ ಸಮಿತಿ ಅಧ್ಯಕ್ಷ ದಿಗ್ವಿಜಯ ಸಿಂಗ್ “ಬಿಜೆಪಿಯೇತರ ಎಲ್ಲಾ ಪಕ್ಷಗಳು ಭಾರತ್ ಬಂದ್ ಗೆ ಬೆಂಬಲ ನೀಡಬೇಕು. ರೈತರ ಹೋರಾಟವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.
“ಒಕ್ಕೂಟ ಸರ್ಕಾರ ರೈತ ವಿರೋಧ ಕಾಯ್ದೆಗಳನ್ನು ಜಾರಿಗೊಳಿಸಿದೆ. ಪರಿಣಾಮ ಮಂಡಿಗಳು ಮುಚ್ಚಲಿವೆ. ರೈತರು ಸಂಕಷ್ಟ ಎದುರಿಸಲಿದ್ದಾರೆ. ಈ ಕರಾಳ ಕಾಯ್ದೆಗಳಿಂದ ಗ್ರಾಹಕರಿಗೂ ಹೊಡೆತ ಬೀಳಲಿದೆ. ಕಡಿಮೆ ಬೆಲೆಗೆ ಖರೀದಿಸುವ ಮತ್ತು ಹೆಚ್ಚು ಬೆಲೆಗೆ ಮಾರಾಟ ಮಾಡುವ ಅವಕಾಶ ತಪ್ಪಲಿದೆ” ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಎಂಬ ಇಬ್ಬರು ಗೆಳೆಯರು 20 ಲಕ್ಷ ಕೋಟಿ ಉತ್ಪಾದಿಸುವ ಕೃಷಿ ಉತ್ಪನ್ನ ಮಾರುಕಟ್ಟೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಇದರಿಂದ ಬರುವ ಲಾಭಾಂಶವನ್ನು ಕಾರ್ಪೋರೇಟ್ ಸ್ನೇಹಿತರಿಗೆ ಹೋಗುವಂತೆ ಮಾಢಲು ಶ್ರಮಿಸುತ್ತಾರೆ ಎಂದು ಟೀಕಾಪ್ರಹಾರ ನಡೆಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರೈತ ಸಂಘಟನೆಗಳೂ ಕೂಡ ಬಂದ್ ಗೆ ಬೆಂಬಲ ಸೂಚಿಸಿವೆ.