ಗುಜರಾತ್ ರಾಜಧಾನಿ ಗಾಂಧೀನಗರದಲ್ಲಿ ಸೆಪ್ಟೆಂಬರ್ 12ರಂದು ಸೇರಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭೂಪೇಂದ್ರ ಪಟೇಲ್ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭೂಪೇಂದ್ರ ಪಟೇಲ್ ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಭೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ವಿಜಯ ರೂಪಾನಿ ಅವರು ಭೂಪೇಂದ್ರ ಪಟೇಲ್ ಹೆಸರನ್ನು ಪ್ರಸ್ತಾಪಿಸಿದರು ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ. ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುತ್ತಿದ್ದಂತೆ ಮಾತನಾಡಿದ ಭೂಪೇಂದ್ರ ಪಟೇಲ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ರಾಜ್ಯಪಾಲರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಘಾಟ್ ಲೋಡಿಯಾ ಕ್ಷೇತ್ರ ಖಾಲಿ ಆಗಿತ್ತು. ಹೀಗಾಗಿ ಭೂಪೇಂದ್ರ ಪಟೇಲ್ ಘಾಟ್ ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು.
ಭೂಪೇಂದ್ರ ಪಟೇಲ್ ಸಂಜೆ ರಾಜಭವನಕ್ಕೆ ತೆರಳಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ವಿಜಯ ರೂಪಾನಿ, ಬಿಜೆಪಿ ರಾಜ್ಯಧ್ಯಕ್ಷ ಪಟೇಲ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು.
ಭೂಪೇಂದ್ರ ಪಟೇಲ್ ಪಾಟೀದಾರ್ ಸಮುದಾಯದ ಮುಖಂಡರಾಗಿದ್ದು, ಡಿಪ್ಲೊಮಾದಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗಿದ್ದರೂ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಗುಜರಾತ್ ಆಡಳಿತವನ್ನು ನಿಯಂತ್ರಿಸಲಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.