ದೇಶದ ರಾಜಧಾನಿ ನವದೆಹಲಿಯಲ್ಲಿ ವಾಯುಗುಣಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಪಟಾಕಿ ಮಾರಾಟ, ಸಂಗ್ರಹ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದಲೂ ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಿದೆ. ಹಾಗಾಗಿ ವ್ಯಾಪಾರಿಗಳು ಈ ವರ್ಷವೂ ಪಟಾಕಿ ಸಂಗ್ರಹ ಮಾಡದಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಈಗಲೇ ಪರಿಸರ ಮಾಲಿನ್ಯ ಅಧಿವಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಾಲಿನ್ಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಆದ್ದರಿಂದ ಪಟಾಕಿ ಮಾರಾಟ, ಸಂಗ್ರಹ ಮತ್ತು ಬಳಕೆ ಮಾಡದಂತೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಹೇಳಿದ್ದಾರೆ.
ವ್ಯಾಪಾರಿಗಳಿಗೆ ನಷ್ಟವಾಗಿರುವುದು ಸತ್ಯ. ಜನರ ಜೀವನ ಉಳಿಸುವ ನಿಟ್ಟಿನಲ್ಲಿ ಇಂತಹ ಕ್ರಮ ಅನಿವಾರ್ಯ. ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿದಿದೆ. ಹಾಗಾಗಿ ಪಟಾಕಿಗೆ ನಿಷೇಧ ಹೇರಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.
ದೆಹಲಿಯಲ್ಲದೆ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಚಂಡಿಗಡ ಮತ್ತು ಉತ್ತರ ಪ್ರದೇಶದ 15 ಜಿಲ್ಲೆಗಳಲ್ಲಿ ಮಾಲಿನ್ಯ ಹೆಚ್ಚಾಗಿದೆ. ಹೀಗಾಗಿ ಆ ರಾಜ್ಯಗಳಲ್ಲಿ ಪಟಾಕಿಗಳಿಗೆ ಸರ್ಕಾರ ನಿಷೇಧ ಹೇರಿದೆ ಎಂದು ಹೇಳಿದ್ದಾರೆ.


