ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಆರೋಪಿಯ ಮೃತದೇಹ ಜನಗಾನ್ ಜಿಲ್ಲೆಯ ಘಾನವುರ ರೈಲ್ವೆ ನಿಲ್ದಾಣದ ಪಕ್ಕದಲ್ಲಿ ಪತ್ತೆಯಾಗಿದೆ. ಆರೋಪಿ ರೈಲು ಕೆಳಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಮೂಲಗಳು ಹೇಳಿವೆ.
ಆರೋಪಿ ಪಲ್ಲಕೊಂಡರಾಜು(30) ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಬಟ್ಟೆಯಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಪತ್ತೆಗೆ ತೆಲಂಗಾಣ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಅತ್ಯಾಚಾರ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದರು.
ಆರು ದಿನಗಳಿಂದ ಆರೋಪಿಯನ್ನು ಬಂಧಿಸಲು ಪೊಲೀಸರು ಇನ್ನಿಲ್ಲದ ಶೋಧಕಾರ್ಯ ಮಾಡಿದ್ದರು. ತೆಲಂಗಾಣ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಆರೋಪಿಯನ್ನು ಕೂಡಲೇ ಬಂಧಿಸಬೇಕು. ಶೀಘ್ರ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದ್ದರು.
ಆರೋಪಿ ರಾಜು ಚಲಿಸುತ್ತಿದ್ದ ರೈಲು ಮುಂಭಾಗಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಎಂದು ರೈಲ್ವೆ ಹಳಿ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷದರ್ಶಿ ಕಾರ್ಮಿಕರು ತಿಳಿಸಿದ್ದಾರೆ.
ಹೈದರಾಬಾದ್-ಚೌಂಡ-ಕೊನಾರ್ಟ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಇ.ಕುಮಾರ್ ಎಂಬಾತನ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.