ಮುಂದಿನ ಚುನಾವಣೆಯಲ್ಲಿ ಉತ್ತರಖಂಡದಲ್ಲಿ ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ನಿರುದ್ಯೋಗ ಭತ್ಯೆ ನೀಡುವ ಜೊತೆಗೆ ಶೇಕಡ 80ರಷ್ಟು ಉದ್ಯೋಗಗಳನ್ನು ರಾಜ್ಯದ ಜನರಿಗೆ ಮೀಸಲಿಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರಪೂರ ಭರವಸೆ ನೀಡಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ರಾಜ್ಯದಲ್ಲಿ ಅಧಿಕಾರಕ್ಕೆ ತಂದರೆ ಉತ್ತರಖಂಡದ ಪ್ರತಿಯೊಬ್ಬ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಉದ್ಯೋಗ ದೊರೆಯುವವರೆಗೂ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು ತಲಾ 5 ಸಾವಿರ ರೂಪಾಯಿ ನೀಡಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 80ರಷ್ಟು ಉದ್ಯೋಗಗಳನ್ನು ಉತ್ತರಖಂಡದವರಿಗೆ ನೀಡಲಾಗುವುದು. ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದಾರೆ.
ಉದ್ಯೋಗದ ನಿರೀಕ್ಷೆಯಲ್ಲಿರುವವರು ಮತ್ತು ಉದ್ಯೋಗದಾತರ ನಡುವೆ ಸಂಪರ್ಕ ಸೇತುವೆಯಾಗಿ ಆನ್ ಲೈನ್ ಪೋರ್ಟಲ್ ಮೂಲಕ ವೇದಿಕೆ ಕಲ್ಪಿಸಲಾಗುವುದು. ನಿರುದ್ಯೋಗಿಗಳು ಮತ್ತು ಉದ್ಯೋಗದಾತರು ಪರಸ್ಪರ ಮಾಹಿತಿ ಹಂಚಿಕೊಳ್ಳಲು ಅವಕಾಶ ಕಲ್ಪಿಸುತ್ತೇವೆ ಎಂದು ವಿವರಿಸಿದ್ದಾರೆ.
ನಿರುದ್ಯೋಗ ಸಮಸ್ಯೆ ನಿವಾರಣೆ ಮತ್ತು ವಲಸೆಯನ್ನು ತಪ್ಪಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಸಚಿವಾಲಯವನ್ನು ರಚಿಸಲಾಗುವುದು ಎಂದು ಹೇಳಿದ ಕೇಜ್ರಿವಾಲ್ ಈಗಿನ ಸರ್ಕಾರ ಉತ್ತರಖಂಡದ ಸಂಪನ್ಮೂಲವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ದೊಡ್ಡ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಿ ರಾಜ್ಯದಿಂದ ವಲಸೆ ಹೋಗುವುದನ್ನು ತಪ್ಪಿಸಲಾಗುವುದು. ರೈತರಿಗೆ 24 ಗಂಟೆಯೂ ಉಚಿತ ವಿದ್ಯುತ್ ನೀಡುವ ಜೊತೆಗೆ ಪ್ರತಿ ಕುಟುಂಬಕ್ಕೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಭರವಸೆ ನೀಡಿದರು.
ರೈತರಿಗೆ 24X7 ನಿರಂತರ ವಿದ್ಯುತ್ ನೀಡುತ್ತೇವೆ. ದೆಹಲಿಯಲ್ಲಿ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಿದ್ದೇವೆ. ಇದೇ ವ್ಯವಸ್ಥೆಯನ್ನು ಉತ್ತರಖಂಡದಲ್ಲಿಯೂ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.