ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬದಲಾವಣೆ ಮಾಡಿದ ಬೆನ್ನಲ್ಲೇ ರಾಜಸ್ಥಾನದ ಮುಖ್ಯಮಂತ್ರಿಯನ್ನು ಬದಲಾಯಿಸುವ ಊಹಾಪೋಹಗಳ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿದ್ದ ಸಚಿನ್ ಪೈಲಟ್ ಗುಂಪು ಭರವಸೆ ಹೊಂದಿದೆ.
ಇತ್ತೀಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನ ಉಸ್ತುವಾರಿ ಅಜಯ್ ಮಾಕನ್ ಮತ್ತು ಎಐಸಿಸಿ ನಾಯಕ ರಾಹುಲ್ ಗಾಂಧಿ ಜೊತೆ ಸಚಿನ್ ಪೈಲಟ್ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಈ ಚರ್ಚೆಗೆ ಹೆಚ್ಚಿನ ಮಹತ್ವ ಬಂದಿದೆ.
ಅಜಯ್ ಮಾಕನ್ ಅವರು ಪಂಜಾಬ್ ಮುಖ್ಯಮಂತ್ರಿ ಬದಲಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ಕಾರಣಕ್ಕೆ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮುಂದಿಟ್ಟಿರುವ ಬೇಡಿಕೆಗೆ ಹೈಕಮಾಂಡ್ ನಾಯಕರು ಸಮ್ಮತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ವರ್ಷ ಸಚಿನ್ ಪೈಲಟ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಂಡಾಯ ಸಾರಿದ್ದರು. ಉಪಮುಖ್ಯಮಂತ್ರಿ ಸ್ಥಾನಕ್ಕೂ ರಾಜಿನಾಮೆ ನೀಡಿದ್ದರು. ಜೊತೆಗೆ 18 ಮಂದಿ ಶಾಸಕರು ಕೂಡ ಗೆಹ್ಲೋಟ್ ಬದಲಾವಣೆಗೆ ಪಟ್ಟುಹಿಡಿದಿದ್ದರು. ಈ ಸಂದರ್ಭದಲ್ಲಿ ಹೈಕಮಾಂಡ್ ಸಚಿನ್ ಪೈಲಟ್ ಜೊತೆ ಮಾತುಕತೆ ನಡೆಸಿ ಸಮಾಧಾನಪಡಿಸಿತ್ತು.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಾದರೆ ಮುಖ್ಯಮಂತ್ರಿ ಆಶೋಕ್ ಗೆಹ್ಲೋಟ್ ಅವರನ್ನು ಬದಲಾವಣೆ ಮಾಢಬೇಕು ಎಂದು ಬಂಡಾಯ ಶಾಸಕ ವೇದ ಪ್ರಕಾಶ್ ಸೋಲಂಕಿ ಬಹಿರಂಗ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ಮೂಲಗಳ ಪ್ರಕಾರ ಪಿತೃಪಕ್ಷದ ನಂತರ ಗೆಹ್ಲೋಟ್ ಅವರನ್ನು ಬದಲಾವಣೆ ಮಾಡುವ ಮುನ್ಸೂಚನೆಗಳು ದೊರೆತಿವೆ ಎಂದು ಹೇಳಲಾಗುತ್ತಿದೆ.
ಸಂಪುಟ ವಿಸ್ತರಣೆ, ಸಂಪುಟ ಪುನರ್ ರಚನೆ ಮಾಡುವುದು ಹಾಗೂ ಆಯೋಗ ಮತ್ತು ಮಂಡಳಿಗೆಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ರಾಜಸ್ಥಾನ ಕಾಂಗ್ರೆಸ್ ಸಮಿತಿಯ ಪುನರ್ ರಚನೆಯೂ ಆಗಬೇಕೆಂಬ ಒತ್ತಾಯ ಪೈಲಟ್ ಗುಂಪಿನಿಂದ ಕೇಳಿಬರುತ್ತಿದೆ. ಹೀಗಾಗಿ ಚುನಾವಣೆ ದೃಷ್ಟಿಯಿಂದ ರಾಜಸ್ಥಾನ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.