ಬೆಲೆ ಹೆಚ್ಚಳದಿಂದ ಜನ ತತ್ತರಿಸಿದ್ದರೂ ಅದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಟಾಂಗಾ ಜಾಥಾ ನಡೆಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಬಂದು ಜನವಿರೋಧಿ ನೀತಿ ಮೂಲಕ ಜನರ ಬದುಕು ದುಸ್ಥಿತಿಗೆ ನೂಕುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ ಖರ್ಗೆ ಸೇರಿದಂತೆ ಹಲವು ನಾಯಕರು ಟಾಂಗಾ ಮೂಲಕ ವಿಧಾನಸೌಧಕ್ಕೆ ಆಗಮಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ‘ಬೆಲೆ ಏರಿಕೆ ಮಾಡಿರುವ ಬಿಜೆಪಿ ಸರ್ಕಾರಗಳು ಜನರನ್ನು ಪಿಕ್ ಪಾಕೆಟ್ ಮಾಡುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಜನರ ನೋವು, ಭಾವನೆ ಅರ್ಥವಾಗುತ್ತಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲ. ಹಾಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

ಇದು ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು ಜನರ ಹೋರಾಟ, ಎಲ್ಲಾ ವರ್ಗದ ಜನರ ನೋವಿನ ಪ್ರತಿಧ್ವನಿ, ಇದನ್ನು ಮುಂದುವರೆಸಿಕೊಂಡು ಹೋಗುತ್ತೇವೆ. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಪಂಚಾಯ್ತಿ ಹಾಗೂ ವಾರ್ಡ್ ಮಟ್ಟದಲ್ಲೂ ನಮ್ಮ ಕಾರ್ಯಕರ್ತರು ಪ್ರತಿಭಟನೆಯ ಧ್ವನಿಯಾಗುತ್ತಾರೆ. ಮಾನಮರ್ಯಾದೆ ಇಲ್ಲದ ಈ ಸರ್ಕಾರವನ್ನು ಜನರೇ ತೆಗೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೊವಿಡ್ ನಿಂದ ಲಕ್ಷಾಂತರ ಮಂದಿ ಸತ್ತಿದ್ದು, ಯಾರಿಗೂ ಈ ಸರ್ಕಾರ ಸಹಾಯ ಮಾಡಿಲ್ಲ. 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದರೂ ಒಬ್ಬರಿಗೂ ಸಹಾಯವಾಗಿಲ್ಲ. ಚಾಲಕರು, ಸವಿತಾ ಸಮಾಜ ಸಾಂಪ್ರದಾಯಿಕ ವೃತ್ತಿ ಅವಲಂಬಿಸಿದವರು. ರೈತರು ಸೇರಿದಂತೆ ಯಾರಿಗೂ ನೆರವು ದೊರೆತಿಲ್ಲ ಎಂದು ದೂರಿದರು.
ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕೆಲಸ ಸಿಗುವಂತೆ ಮಾಡಬೇಕು. ಸರ್ಕಾರ ತೆರಿಗೆ ಹಾಕಿ ಜನರನ್ನು ಹಿಂಡುತ್ತಿದೆ. ಹಾಗಾಗಿ ಅವರ ರಕ್ಷಣೆಗೆ ಹೋರಾಟ ಮಾಡುತ್ತೇವೆ. ಜನ ಈ ಕಿತ್ತೊಗೆಯುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.


