ರಾಜಸ್ಥಾನದ ಯುವ ಮುಖಂಡ ಸಚಿನ್ ಪೈಲಟ್ ಅವರು ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಭೇಟಿ ಮಾಡಿರುವುದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬದಲಾವಣೆಯ ಚರ್ಚೆಗೆ ಗ್ರಾಸ ಮಾಡಿಕೊಟ್ಟಿದೆ. ಆದರೆ ಸಂಪುಟ ವಿಸ್ತರಣೆ ಮತ್ತು ಪಕ್ಷ ಸಂಘಟನೆಯ ಕುರಿತು ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಒಂದು ವಾರದಲ್ಲಿ ಸಚಿನ್ ಪೈಲಟ್ ಎರಡು ಬಾರಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾರಣವಾಗಿದೆ. ಪಂಜಾಬ್ ನಲ್ಲಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ದಿಢೀರ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಬದಲಿಸಿ ದಲಿತ ಮುಖ್ಯಮಂತ್ರಿಗೆ ಅವಕಾಶ ಕಲ್ಪಿಸಿದ ಬೆನ್ನಲ್ಲೇ ಈ ಭೇಟಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.
ದೆಹಲಿಯ ತುಘಲಕ್ ರಸ್ತೆಯ ನಿವಾಸದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು ಈ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ವಾದ್ರ ಕೂಡ ಹಾಜರಿದ್ದರು. ಚರ್ಚೆಯಲ್ಲಿ ರಾಜಸ್ಥಾನ ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆಯಲ್ಲಿ ಬದಲಾವಣೆ, ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಕಳೆದ ವರ್ಷ ಸಚಿನ್ ಪೈಲಟ್ ನಾಯಕತ್ವ ಬದಲಾವಣೆಗೆ ಪಟ್ಟುಹಿಡಿದಿದ್ದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ದ ಬಹಿರಂಗ ಸಮರ ಸಾರಿದ್ದರು. 14 ಮಂದಿ ಶಾಸಕರು ಪೈಲಟ್ ಬೆಂಬಲಕ್ಕೆ ನಿಂತಿದ್ದರು. ಹೀಗಾಗಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಕಳೆದುಕೊಂಡಿದ್ದರು ಸಚಿನ್ ಪೈಲಟ್.
ಇದೀಗ ಮತ್ತೆ ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬಂದಿದೆ. ಸಚಿನ್ ಎಐಸಿಸಿ ನಾಯಕರನ್ನು ಭೇಟಿ ಮಾಡಿ ಸಂಪುಟಕ್ಕೆ ತನ್ನ ಬೆಂಬಲಿಗರನ್ನು ಸೇರ್ಪಡೆ ಮಾಡಬೇಕೆಂಬ ಒತ್ತಡ ಹೇರಿದ್ದಾರೆ. ಅಷ್ಟೇ ಅಲ್ಲ ಮುಂದಿನ ಚುನಾವಣೆಯ ದೃಷ್ಟಿಯಿಂದ ನಾಯಕತ್ವ ಬದಲಾವಣೆಯ ಪ್ರಸ್ತಾಪವನ್ನು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ನಲ್ಲಿ ದಲಿತ ಮುಖ್ಯಮಂತ್ರಿಗೆ ಅವಕಾಸ ಕಲ್ಪಿಸಿರುವ ನಡುವೆಯೇ ರಾಜಸ್ಥಾನ ಮತ್ತು ಛತ್ತೀಸ್ ಗಡದಲ್ಲೂ ಇಂತಹ ಬದಲಾವಣೆಗೆ ಎಐಸಿಸಿ ಇಚ್ಚಿಸಿದೆ. ಛತ್ತೀಸ್ ಗಡದಲ್ಲಿ ಎರಡೂವರೆ ವರ್ಷ ಅವಧಿಗೆ ಒಬ್ಬರಂತೆ ಮುಖ್ಯಮಂತ್ರಿಯಾಗಿ ಆಧಿಕಾರದಲ್ಲಿ ಇರಬೇಕೆಂದು ಮೌಖಿಕ ಒಪ್ಪಂದವಾಗಿತ್ತು. ಆದ್ದರಿಂದ ಈಗ ಆರೋಗ್ಯ ಸಚಿವ ಟಿ.ಎಸ್. ಸಿಂಘ್ ಡಿಯೋ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ.