ಜಯದೇವ ಆಸ್ಪತ್ರೆಯನ್ನು ವಿಕೇಂದ್ರಿಕರಣಗೊಳಿಸಿ ಎಲ್ಲಾ ಜಿಲ್ಲೆಗಳಲ್ಲಿಯೂ ಹೃದ್ರೋಗಕ್ಕೆ ಸಂಬಂಧಿಸಿದ ಆಸ್ಪತ್ರೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಹಾಗೆಯೇ ತುಮಕೂರಿನಲ್ಲಿಯೂ ಜಯದೇವ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮೂರನೇ ಕೋವಿಡ್ ಅಲೆ ನಿಯಂತ್ರಣಕ್ಕೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. ಆಕ್ಸಿಜನ್, ಐಸಿಯು ಮತ್ತು ಬೆಡ್ಗಳ ಸಮಸ್ಯೆಯಾಗುವುದಿಲ್ಲ. ಆರೋಗ್ಯ ಸೇವೆಗೆ ಸರ್ಕಾರ ಹೆಚ್ಚು ಒತ್ತು ನೀಡಲಿದೆ ಎಂದು ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ರಾಜ್ಯದಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಪ್ರತಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿಯೂ ವೈದ್ಯರು ಕಾರ್ಯನಿರ್ವಹಿಸುವಂತಾಗಿದೆ ಎಂದು ತಿಳಿಸಿದರು.
ತುಮಕೂರು ಜಿಲ್ಲಾಸ್ಪತ್ರೆ 400 ಹಾಸಿಗೆಗಳುಳ್ಳ ಆಸ್ಪತ್ರೆಯಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ನೂರು ಹಾಸಿಗೆಗಳುಳ್ಳ ಸಾಮರ್ಥ್ಯದ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣವಾಗಲಿದೆ. ಇದಕ್ಕೆ ಸುಮಾರು 20 ಕೋಟಿ ರೂ. ವೆಚ್ಚವಾಗಲಿದ್ದು ಶೇ.60ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ ಎಂದರು.
ದೇಶದ ಸರಾಸರಿಯಲ್ಲಿ ಒಂದು ಲಕ್ಷ ಹೆರಿಗೆಯಲ್ಲಿ 122 ತಾಯಂದಿರು ಮರಣ ಹೊಂದುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ 97 ತಾಯಂದಿರು ಮರಣ ಹೊಂದುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ 2022ನೇ ಸಾಲಿಗೆ ತಾಯಿಯ ಮರಣ ಪ್ರಮಾಣವನ್ನು 100ಕ್ಕೆ ತಗ್ಗಿಸುವ ಗುರಿ ಹೊಂದಿದೆ ಎಂದು ಹೇಳಿದರು.
ನಮ್ಮ ರಾಜ್ಯದಲ್ಲಿ ತಾಯಿ ಮರಣ ಪ್ರಮಾಣ 97ಕ್ಕೆ ಇಳಿದಿದೆ. ವಿಶ್ವ ಆರೋಗ್ಯ ಸಂಸ್ಥೆಯು 2030ರ ವೇಳೆಗೆ ತಾಯಿ ಮರಣ ಪ್ರಮಾಣವನ್ನು 70ಕ್ಕೆ ತರುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ಮುಂದಿನ ಐದು ವರ್ಷದಲ್ಲಿ ಇಡೀ ರಾಜ್ಯದಲ್ಲಿ 125 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ನಿರ್ಮಿಸುವ ಮಹಾತ್ವಾಕಾಂಕ್ಷೆ ಹೊಂದಿದೆ ಎಂದರು.