ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಒಕ್ಕೂಟ ಕರೆ ನೀಡಿರುವ ಭಾರತ ಬಂದ್ ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರೈತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದು ಪ್ರತಿಭಟನೆ ನಡೆಸುತ್ತಿವೆ. ಮುಂಜಾನೆಯಿಂದಲೇ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿರುವುದು ಕಂಡುಬಂದಿದೆ.
ಬಿಹಾರ, ಪಂಜಾಬ್, ಕೇರಳ, ಆಂಧ್ರಪ್ರದೇಶ, ರಾಜಸ್ಥಾನ ಹೀಗೆ ಎಲ್ಲಾ ರಾಜ್ಯಗಳಲ್ಲಿ ಹೆದ್ದಾರಿ ತಡೆ ಪ್ರತಿಭಟನೆಗಳು ಆರಂಭವಾಗಿದೆ. ರಸ್ತೆತಡೆ, ಧರಣಿ, ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿದೆ.
ಹರ್ಯಾಣದ ಶಹಬಾದ್ ಕುರುಕ್ಷೇತ್ರದಲ್ಲಿ ದೆಹಲಿ-ಅಮೃತಸರ ಹೆದ್ದಾರಿ ಬಂದ್ ಮಾಡಲಾಗಿದೆ. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದ್ದು ಬಂದ್ ಶಾಂತಿಯುತವಾಗಿ ಮುಂದುವರಿದಿದೆ.
ಬಿಹಾರದ ಹಾಜಿಪುರದಲ್ಲಿ ಆರ್.ಜೆ.ಡಿ ಕಾರ್ಯಕರ್ತರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಹಾಜಿಪುರ-ಮುಜಾಫರ್ ಪುರ ಹೆದ್ದಾರಿ ಬಂದ್ ಆಗಿದೆ.
ಕರ್ನಾಟಕದಲ್ಲೂ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತರ ಕರೆಗೆ ಹಲವು ಸಂಘಟನೆಗಳು ದನಿಗೂಡಿಸಿವೆ. ಬಂದ್ ನಲ್ಲಿ ಭಾಗಿಯಾಗಿದ್ದು ಅನ್ನದಾತರ ಪರ ಹೋರಾಟಕ್ಕೆ ಇಳಿದಿವೆ.
ಕಲಬುರಗಿಯಲ್ಲಿ ಕೇಂದ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳ ನೂರಾರು ಕಾರ್ಯಕರ್ತರು ಕೇಂದ್ರ ಬಸ್ ನಿಲ್ದಾಣದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಲೇಖಕಿ ಹಾಗೂ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ಹಲವು ಸಂಘಟನೆಗಳು ನಮ್ಮ ರೈತರ ಹೋರಾಟವನ್ನು ಬೆಂಬಲಿಸಿವೆ. ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ನಗರದಲ್ಲೂ ಬಂದ್ ಬಿಸಿ ತಟ್ಟಿದೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ತುಮಕೂರು ನಗರದಲ್ಲೂ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.