ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಭಾರತ್ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ರೈತರ ಪ್ರತಿಭಟನೆಗೆ ನಾವು ಸಂಪೂರ್ಣ ಬೆಂಬಲ ನೀಡಿದ್ದೇವೆ. ದೇಶದ ಪ್ರತಿಯೊಬ್ಬ ಪ್ರಜೆಯೂ ರೈತರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಭಾರತ್ ಬಂದ್ ನಂತರ ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಬೇಕು. ರೈತ ನಾಯಕರು ಮಾತುಕತೆಗೆ ಸಿದ್ದರಾಗಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ರೈತರು ಕೇವಲ ಉತ್ತರ ಪ್ರದೇಶದಿಂದ ಮಾತ್ರ ಬಂದಿಲ್ಲ. ದೇಶದ ಎಲ್ಲೆಡೆಯಿಂದ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ಪ್ರತಿಭಟನೆ ಎಲ್ಲಿಯವರೆಗೆ ಮುಂದುವರಿಯುತ್ತದೆ ಎಂದು ಹೇಳಲು ಬರುವುದಿಲ್ಲ. ಆದರೆ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ಭಾರತ್ ಬಂದ್ ಬೇಡಿಕೆಗಳು ಸರಿಯಾಗಿವೆ. ಭಾರತ್ ಬಂದ್ ಕುರಿತು ಸರಿಯಾಗಿ ಸುದ್ದಿಗಳನ್ನು ಮಾಡಿದ್ದರೆ ಮತ್ತು ಬಂದ್ ನಲ್ಲಿ ಏನಾಗಿದೆ ಎಂಬುದನ್ನು ತೋರಿಸಿದ್ದರೆ ಬಂದ್ ಯಶಸ್ವಿಯಾಗಿರುವುದು ತಿಳಿಯುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಮುಖಂಡ ಪವನ್ ಖೇರ ಮಾತನಾಡಿ, “ರೈತರ ಬೆಳೆ ಬೆಳೆಯಲು ಅಧಿಕ ವೆಚ್ಚ ತಗಲುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.
ರೈತರು ಪ್ರತಿಭಟನೆ ನಡೆಸಿದ ಪರಿಣಾಮ 25 ರೈಲು ಸಂಚಾರದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪಂಜಾಬ್, ಹರ್ಯಾಣ ಮತ್ತು ದೆಹಲಿಯಲ್ಲಿ ರೈತರ ಪ್ರತಿಭಟನೆಯಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೃದಯಾಘಾತದಿಂದ ರೈತ ಸಾವು
ಸಿಂಘು ಗಡಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾಗೇಲ್ ರಾಮ್ (55) ಎಂದು ಗುರುತಿಸಲಾಗಿದೆ. ಪಂಜಾಬ್ ನ ಖೇಲಾ ಗ್ರಾಮದ ರೈತನೆಂದು ತಿಳಿದುಬಂದಿದೆ.