2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನ್ನಡಿಗರ ಸ್ವಂತ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಸಮೀಪದ ಬಿಡದಿಯಲ್ಲಿ ಪಕ್ಷದ ಮುಖಂಡರಿಗೆ ಹಮ್ಮಿಕೊಂಡಿರುವ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಕುಮಾರಸ್ವಾಮಿ ‘ರಾಜ್ಯದ 224 ಕ್ಷೇತ್ರಗಳಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ’ ಎಂದು ಎಂದು ಹೇಳಿದ್ದಾರೆ.
ಮುಂದಿನ 2023ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವ. ಹಾಗಾಗಿ ಮುಂದಿನ 17 ತಿಂಗಳು ಮುಖಂಡರು ಶ್ರಮವಹಿಸಿ ಕೆಲಸ ಮಾಡಬೇಕು. ಪಕ್ಷದ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗಿಯಾಗಬೇಕು. ಆಗ ಮಾತ್ರ ಕನ್ನಡಿಗರ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಬಹುದು ಎಂದು ತಿಳಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿದ್ದೇವೆ. ಇದು 123 ಪ್ಲಸ್ ಆಗಬಹುದು. ಆದರೆ ಕಡಿಮೆಯಂತೂ ಆಗುವುದಿಲ್ಲ. ಪ್ರಾದೇಶಿಕ ಪಕ್ಷಗಳು ಅಧಿಕಾರ ಹಿಡಿದಿರುವ ಬಗ್ಗೆ ಮಾಹಿತಿ ನೀಡಿದರು.
ಪಶ್ಚಿಮಬಂಗಾಳ, ಜಾರ್ಖಂಡ್, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಅಸ್ತಿತ್ವದಲ್ಲಿವೆ. ಆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸಿವೆ. ಹಾಗಾಗಿ ರಾಜ್ಯದಲ್ಲು ಕೂಡ ಕನ್ನಡಿಗರಿಂದ, ಕನ್ನಡಿಗರಿಗಾಗಿ ಮತ್ತು ಕನ್ನಡಿಗರಿಗೋಸ್ಕರ ಇರುವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ಲೇಷಿಸಿದರು.
ಈಗಾಗಲೇ ಕಣಕ್ಕಿಳಿಸುವ ಅಭ್ಯರ್ಥಿಗಳನ್ನು ಗುರುತಿಸಲಾಗಿದ್ದು ಅವರಿಗೆ ಕ್ಷೇತ್ರದ ಜನರಿಗೆ ಹತ್ತಿರವಾಗುವುದು ಹೇಗೆ ಎಂಬ ಬಗ್ಗೆ ತರಬೇತಿ ನೀಡುತ್ತೇವೆ. ನಾಯಕತ್ವ ಗುಣಗಳನ್ನು ಕಲಿಸಲಾಗುವುದು ಎಂದು ತಿಳಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಪಕ್ಷವನ್ನು ತುಳಿಯಲು ಪ್ರಯತ್ನಿಸಿದರೆ ಅದರಿಂದ ಪ್ರಯೋಜವೇನೂ ಇಲ್ಲ ಎಂದು ಟೀಕಿಸಿದರು.