ಎಲ್ಲಾ ನಾಯಕರಂತೆ ನಾವು ಚುನಾವಣೆ ಎದುರಿಸುತ್ತೇವೆ. ಪಕ್ಷದ ನೇತೃತ್ವದಲ್ಲಿ ಉಪಚುನಾವಣೆ ಎದುರಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಉಪಚುನಾವಣೆ ಇರುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಶೀಘ್ರವೇ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಇದು ಮೊದಲ ಉಪಚುನಾವಣೆಯಾಗಿದೆ. ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿಹೋಗಿದ್ದರು. ಆದರೆ ಬೊಮ್ಮಾಯಿ ಪಕ್ಷದ ನೇತೃತ್ವದಲ್ಲಿ ಉಪಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಉಪಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ಪಕ್ಷದ ಅಧ್ಯಕ್ಷರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದರು. ಉದಾಸಿ ಹಾನಗಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ನಾಯಕತ್ವದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಸಿಂಧಗಿಯಲ್ಲಿ ಬಿಜೆಪಿ ಮೂರು ಬಾರಿ ಗೆಲುವು ಸಾದಿಸಿತ್ತು ಎಂದು ಹೇಳಿದರು.
ಅಕ್ಟೋಬರ್ 30ರಂದು ಉಪಚುನಾವಣೆ
ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ 30ರಂದು ಮತ್ತು ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಜೆಡಿಎಸ್ ಶಾಸಕ ಎಂ.ಸಿ.ಮನಗೋಳಿ ಸಾವಿನಿಂದ ಸಿಂಧಗಿ ಮತ್ತು ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರಗಳು ತೆರವಾಗಿದ್ದವು.
ಈ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿರುವ ಚುನಾವಣಾ ಆಯೋಗ ಅಕ್ಟೋಬರ್ 1ರಂದು ಆಧಿಸೂಚನೆ ಹೊರಡಿಸುವುದಾಗಿ ಹೇಳಿದೆ.
ಅಕ್ಟೋಬರ್ 1ರಿಂದಲೇ ನಾಮಪತ್ರಗಳನ್ನು ಸಲ್ಲಿಸಬಹುದು. ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನ. ಅಕ್ಟೋಬರ್ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 13ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ ಎಂದು ಆಯೋಗ ತಿಳಿಸಿದೆ.