ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೇ ಹೊರತು ಬದುಕಿಗೇ ಬೆಂಕಿ ಇಡಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್. ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು ಅದಕ್ಕೆ ಕೊಳ್ಳಿ ಇಡಬಾರದು. ಆರ್.ಎಸ್.ಎಸ್.ಹುಟ್ಟಿದಾಗಿನಿಂದಲೂ ಏನೆಲ್ಲಾ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೆ ಗೊತ್ತಿರುವ ಸಂಗತಿ ಎಂದು ಲೇವಡಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ 2 ಸಾವಿರ ರೂ ಪರಿಹಾರ ಪಡೆಯಲು 100 ರೂ ಲಂಚ ಕೇಳಿದ ವರದಿಗಳು ಬಂದಿವೆ. ಇದು ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೊಡಿ. ಜನರ ಬವಣೆಗಳ ಬಗ್ಗೆ ಆರ್.ಎಸ್.ಎಸ್. ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ ಎಂದು ವ್ಯಂಗ್ಯ ಮಾಡಿದ್ದಾರೆ.
ಬಿಜೆಪಿಯ ಸಿಟಿ ರವಿ ಅವರೇ ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್.ಎಸ್.ಎಸ್. ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ ಎಂದು ಹೇಳಿದ್ದಾರೆ.
ಜನಪ್ರತಿನಿಧಿಗಳನ್ನು ಸರ್ಕಾರಗಳನ್ನು, ಆಡಳಿತ ಯಂತ್ರಾಮಗವನ್ನು ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥಮಾಡಿಕೊಳ್ಳಿ ಸಿ.ಟಿ. ರವಿಯವರೇ. ನಾನು ಸತ್ಯದ ಪರ ಎಂದು ತಿವಿದಿದ್ದಾರೆ.
ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ ಆರ್.ಎಸ್.ಎಸ್. ಬೆಲೆ ಏರಿಕೆ ಬಗ್ಗೆ ಮಾತನಾಢಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7ವರ್ಷಗಳ ಆಡಳಿತದ ಬಗ್ಗೆ ದನಿ ಎತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಕೊವಿಡ್, ಬೆಲೆ ಏರಿಕೆಯಿಂದ ಜನಜೀವನ ಹಳ್ಳ ಹಿಡಿದು ಹೋಗಿದೆ. ಬಡ ಭಾರತದ ಜೀವ ಹಿಂಡುತ್ತಿರುವ ಶ್ರೀಮಂತ ಭಾರತದ ಸಾರಥ್ಯ ವಹಿಸಿರುವವರು ಒಂದಿಬ್ಬರು ಉದ್ಯಮಿಗಳ ಜೋಳಿಗೆ ತುಂಬಿ ಜನರ ಬಾಳಿಗೆ ಕೊಳ್ಳಿ ಇಡುತ್ತಿರುವುದು ಎಲ್ಲರಿಗೂ ಗೊತ್ತಾಗುತ್ತದೆ. ಅನಿಯಂತ್ರಿತ ಬೆಲೆ ಏರಿಕೆ ಮಾಫಿಯಾ ಹಿಂದೆ ಇರುವ ಶಕ್ತಿಗಳ ಬಗ್ಗೆ ಬಿಜೆಪಿ ನಾಯಕರು ಮಾಡನಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇಂದಿನ ಬೆಳಗಿನ ಶಾಕ್! 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 15 ರೂ. ಹೆಚ್ಚಳವಾಗಿದೆ. ಈ ಸಿಲಿಂಡರ್ ಬೆಲೆ ಈಗ 900 ರೂ. ಗಡಿಯಲ್ಲಿದೆ. 7 ವರ್ಷಗಳ ಅಚ್ಛೇದಿನದ ಭ್ರಮೆಯಲ್ಲಿ ಜನರ ಬದುಕು ಬೆಂಕಿಯಲ್ಲಿ ಬೇಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.