ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಅದರೆ ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೊಮ್ಮಾಯಿ ಅವರೇ, ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ ಎಂದು ಒತ್ತಾಯಿಸಿದ್ದಾರೆ.
2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು ಎಂದು ಮಾಹಿತಿ ನೀಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ ಎಂದು ವ್ಯಂಗ್ಯ ಮಾಡಿದ್ದಾರೆ.
ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ಬೊಮ್ಮಾಯಿ ಅವರೇ, ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ ಎಂದು ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷೆ ಕೊಡಿಸಿ, ಬೊಮ್ಮಾಯಿ ಅವರೇ, ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ ನ್ಯಾಯ ಕೊಡಿಸಿ ಎಂದು ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಬೊಮ್ಮಾಯಿ ಅವರೇ ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ್ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗ ಹಿಡಿದು ಕುಣಿದಾಡಿದ ಪೋಟೋಗಳನ್ನು ನೋಡಿ ಕಣ್ತುಂಬಿಕೊಳ್ಳಿ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.